ಬೆಂಗಳೂರು: ಕಾವೇರಿ ನದಿ ನೀರು, ಮತ್ತು ಮೇಕೆದಾಟು ಹೋರಾಟದಲ್ಲಿ ಪಾಲ್ಗೊಂಡಿದ್ದ ರೈತರು ಮತ್ತು ಹೋರಾಟಗಾರರ ಮೇಲಿನ ಪ್ರಕರಣಗಳನ್ನು ಕೈಬಿಡುವುದಾಗಿ ಸಿಎಂ ಸೂಚನೆ ನೀಡಿದ್ದಾರೆ.
ಹೋರಾಟಗಾರರು ಹಾಗೂ ರೈತರ ಮೇಲಿನ ಪ್ರಕರಣಗಳನ್ನು ಹಿಂಪಡೆಯುವ ಬಗ್ಗೆ ಅಗತ್ಯ ಕ್ರಮ ಕೈಗೊಂಡು ಈ ವಿಚಾರವನ್ನು ಸಚಿವ ಸಂಪುಟದ ಮುಂದೆ ಮಂಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ ಸೂಚಿಸಿದ್ದಾರೆ.
ಮೇಕೆದಾಟು ಹೋರಾಟದಲ್ಲಿ ಪಾಲ್ಗೊಂಡಿದ್ದವರು ಸೇರಿದಂತೆ ಹೋರಾಟಗಾರರು ಹಾಗೂ ರೈತರ ಮೇಲೆ ದುರುದ್ದೇಶದಿಂದ ಹಿಂದಿನ ಸರ್ಕಾರ ದಾಖಲಿಸಿದ್ದ ಪ್ರಕರಣಗಳನ್ನು ಕೈ ಬಿಡಬೇಕು ಎಂದು ಇತ್ತೀಚೆಗೆ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರು ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿದ್ದರು.
ಈ ಮನವಿಗೆ ಸ್ಪಂದಿಸಿರುವ ಮುಖ್ಯಮಂತ್ರಿಯವರು ಗೃಹ ಸಚಿವರಿಗೆ ಈ ನಿರ್ದೇಶನ ನೀಡಿದ್ದು, ಹೋರಾಟಗಾರರು ಹಾಗೂ ರೈತರ ವಿರುದ್ಧದ ಪ್ರಕರಣಗಳ ಬಗ್ಗೆ ಸಚಿವ ಸಂಪುಟ ಉಪ ಸಮಿತಿಯಲ್ಲಿ ಚರ್ಚಿಸಿ ಅಗತ್ಯ ಕ್ರಮಕ್ಕಾಗಿ ಕ್ಯಾಬಿನೆಟ್ ಮುಂದೆ ಮಂಡಿಸುವಂತೆ ತಿಳಿಸಿದ್ದಾರೆ.