ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧದ ಕಮಿಷನ್ ಆರೋಪವನ್ನು ಬಿಬಿಎಂಪಿ ಗುತ್ತಿಗೆದಾರರ ಸಂಘ, ಇದೀಗ ಕಾಂಗ್ರೆಸ್ ಹೈಕಮಾಂಡ್ ಗಮನಕ್ಕೆ ತಂದಿದೆ. ಪಕ್ಷದ ವರಿಷ್ಠರಿಗೆ ಆರೋಪದ ಬಗ್ಗೆ ಟ್ವೀಟ್ ಮಾಡುವ ಮೂಲಕ ಗಮನ ಸೆಳೆದಿದೆ.
ಬಿಬಿಎಂಪಿ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಡಿಸಿಎಂ ಡಿಕೆಶಿ ಸೇರಿದಂತೆ ಕೆಲ ಸಚಿವರ ವಿರುದ್ಧ ಕಮಿಷನ್ ಆರೋಪದ ವಿವರಣೆಯೊಂದಿಗೆ ರಾಹುಲ್ ಗಾಂಧಿ, ಪ್ರಿಯಾಂಕ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಟ್ವೀಟ್ ಮಾಡಿದ್ದಾರೆ. ಆ ಮೂಲಕ ಕಾಂಗ್ರೆಸ್ ಹೈಕಮಾಂಡ್ ಮೇಲೆ ಸರ್ಕಾರದ ವಿರುದ್ಧ ಗಮನ ಸೆಳೆಯಲು ಯತ್ನಿಸಿದೆ.
‘Savebbmpcontractors ಹ್ಯಾಷ್ ಟ್ಯಾಗ್ ನೊಂದಿಗೆ ಟ್ವಿಟ್ ಮಾಡಿರುವ ಬಿಬಿಎಂಪಿ ಗುತ್ತಿಗೆದಾರರು, ಕಾಂಗ್ರೆಸ್ ಈ ಹಿಂದೆ ಗುತ್ತಿಗೆದಾರರ ಸಂಘ ಮಾಡಿದ್ದ 40 ಶೇ ಕಮಿಷನ್ ಭ್ರಷ್ಟಾಚಾರ ಆರೋಪವನ್ನು ಬಳಸಿ ಅಧಿಕಾರಕ್ಕೆ ಬಂದಿದೆ. ಇದೀಗ ಕಾಂಗ್ರೆಸ್ ಸರ್ಕಾರವೂ ಅದೇ ಭ್ರಷ್ಟಾಚಾರದ ಹಾದಿಯಲ್ಲಿ ನಡೆಯುತ್ತಿದೆ ಎಂದು ಆರೋಪಿಸಿದೆ.
ಬೆಂಗಳೂರು ಅಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಕಾಮಗಾರಿಯ ಬಾಕಿ ಬಿಲ್ ಹಣ ಬಿಡುಗಡೆಗೆ 10-15% ಕಮಿಷನ್ಗೆ ಬೇಡಿಕೆ ಇಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರ ವಿರುದ್ಧದ ಸಾರ್ವಜನಿಕ ಆಕ್ರೋಶದ ಅಲೆಯ ಮೇಲೆ ಅಧಿಕಾರಕ್ಕೆ ಬಂದಿದೆ. ಆದರೆ ಪಕ್ಷದ ಕೆಲ ಸದಸ್ಯರು ಬಾಕಿ ಬಿಲ್ ಬಿಡುಗಡೆಗೆ ಕಮಿಷನ್ ಕೇಳುತ್ತಿರುವುದು ಬೇಸರದ ಸಂಗತಿಯಾಗಿದೆ. ಈ ಸಂಬಂಧ ತಾವುಗಳು ಅದಷ್ಟು ಬೇಗ ಮಧ್ಯಪ್ರವೇಶಿಸಿ, ಸಂಕಷ್ಟದಲ್ಲಿರುವ ಗುತ್ತಿಗೆದಾರರ ನೆರವಿಗೆ ಬರಬೇಕು ಎಂದು ಬಿಬಿಎಂಪಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆ.ಟಿ.ಮಂಜುನಾಥ್ ಮನವಿ ಮಾಡಿದ್ದಾರೆ.
ಇದೇ ವೇಳೆ, ಗೃಹ ಕಚೇರಿ ಕೃಷ್ಣಾದಲ್ಲಿ ಬಿಬಿಎಂಪಿ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಕಳೆದ 28 ತಿಂಗಳ ಹಿಂದೆ ಪೂರ್ಣಗೊಳಿಸಿರುವ ಕಾಮಗಾರಿಗಳ ಬಿಲ್ ಪಾವತಿ ಬಾಕಿ ಇದೆ. ಚುನಾವಣೆ, ಹೊಸ ಸರ್ಕಾರ ರಚನೆ ಹೀಗೆ 8 ತಿಂಗಳಿನಿಂದ ಬಾಕಿ ಮೊತ್ತ ಬಿಡುಗಡೆ ಆಗಿರುವುದಿಲ್ಲ. ಇದರಿಂದ ಗುತ್ತಿಗೆದಾರರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿದ್ದಾರೆ ಎಂದು ಅಳಲು ತೋಡಿಕೊಂಡಿದ್ದಾರೆ.