ಬೆಂಗಳೂರು: ವಾಲ್ಮೀಕಿ ನಿಗಮ ಅಕ್ರಮಕ್ಕೆ ಸಂಬಂಧಿಸಿದಂತೆ ಆತ್ಮಹತ್ಯೆ ಮಾಡಿಕೊಂಡಿದ್ದ ಅಧೀಕ್ಷಕ ಚಂದ್ರಶೇಖರನ್‌ ಕುಟುಂಬಕ್ಕೆ ರಾಜ್ಯ ಸರ್ಕಾರ 25 ಲಕ್ಷ ಪರಿಹಾರ ಘೋಷಣೆ ಮಾಡಿದೆ.

ಅಧಿಕಾರಿಯ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲು ಪರಿಹಾರ ನೀಡಲಾಗುತ್ತದೆ, ಈ ಬಗ್ಗೆ ಅಧಿವೇಶನದಲ್ಲಿ ಅಧಿಕೃತವಾಗಿ ಘೋಷಣೆ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರಕ್ಕೆ ಮಸಿ ಬಳಿಯಬೇಕು ಎಂದು ವಿಪಕ್ಷದವರು ಪ್ರಯತ್ನಿಸುತ್ತಿದ್ದಾರೆ. ದಲಿತರ ಪರವಾಗಿ ಮಾತನಾಡಬೇಕು, ಸಿಂಪತಿ ಗಿಟ್ಟಿಸಿಕೊಳ್ಳಬೇಕು ಅಂತ ಮಾಡುತ್ತಿದ್ದಾರೆ.

ನಾವು ದಲಿತರ ಪರವಾಗಿದ್ದೀವಿ, ನಮ್ಮ ಗ್ಯಾರಂಟಿ ಯೋಜನೆಗಳು ಹಿಂದುಳಿದವರ ಪರ ಇವೆ. ನಮ್ಮ ಗ್ಯಾರಂಟಿ ಯೋಜನೆಗೆ ಜಾತಿ, ಧರ್ಮ ಇಲ್ಲ. ಕಾನೂನಿಗೆ ವಿರುದ್ಧ ಯಾರಿದ್ದರೂ, ನಾವು ಅವರ ವಿರುದ್ಧ ಫೈಟ್ ಮಾಡುತ್ತೇವೆ ಎಂದು ತಿಳಿಸಿದರು.

ಆತ್ಮಹತ್ಯೆ ಮಾಡಿಕೊಂಡಿರುವ ಚಂದ್ರಶೇಖರನ್‌ ಪತ್ನಿ ಮಕ್ಕಳ ಶಿಕ್ಷಣಕ್ಕೆ ತೊಂದರೆ ಆಗುತ್ತಿದೆ ಎಂದು ಹೇಳಿದ್ದಾರೆ. ಅದಕ್ಕೆ ಆ ಕುಟುಂಬಕ್ಕೆ 25 ಲಕ್ಷ ಹಣ ಪರಿಹಾರ ಘೋಷಣೆ ಮಾಡುತ್ತಿದ್ದೇವೆ. ಈಗ ಪರಿಹಾರ ಘೋಷಣೆ ಮಾಡಬಾರದಿತ್ತು, ಅಧಿವೇಶನದಲ್ಲಿ ಪರಿಹಾರ ಘೋಷಣೆ ಮಾಡುತ್ತೇನೆ ಎಂದು ತಿಳಿಸಿದರು.