ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದು ಹೋಗಿದೆ. ಹುಬ್ಬಳ್ಳಿಯಲ್ಲಿ ಕೊಲೆಯಾದ ನೇಹಾ ಅವರ ತಂದೆ, ಕಾಂಗ್ರೆಸ್ ಕಾರ್ಪೊರೇಟರ್ಗೆ ಕೂಡ ಸರ್ಕಾರ ಸಹಾಯ ಮಾಡುತ್ತಿಲ್ಲ. ಸಿಎಂ ಸಿದ್ದರಾಮಯ್ಯನವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಕಿಡಿಕಾರಿದರು.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಎನ್ಡಿಎ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಪರ ಚುನಾವಣಾ ಪ್ರಚಾರದಲ್ಲಿ ಅವರು ಪಾಲ್ಗೊಂಡರು. ಬಳಿಕ ಬಿದಿರುಕುಪ್ಪೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ತಾಲಿಬಾನ್ ಸರ್ಕಾರ ಆಡಳಿತ ನಡೆಸುತ್ತಿದೆ. ಕಾನೂನು ಸುವ್ಯವಸ್ಥೆ ಪೂರ್ತಿ ಹದಗೆಟ್ಟು ಜನರು ತಮ್ಮ ರಕ್ಷಣೆಯನ್ನು ತಾವೇ ಮಾಡಿಕೊಳ್ಳಬೇಕು ಎಂಬ ಮನಸ್ಥಿತಿಯನ್ನು ದುಷ್ಟ ಕಾಂಗ್ರೆಸ್ ಉಂಟುಮಾಡಿದೆ.
ಜೈ ಶ್ರೀರಾಮ್ ಎಂದರೆ, ಮೋದಿ ಕುರಿತು ಹಾಡು ಹಾಕಿದರೆ ಹೊಡೆಯುತ್ತಾರೆ. ಪಾಕ್ ಜಿಂದಾಬಾದ್ ಎಂದವರಿಗೆ ಬಿರಿಯಾನಿ ಜೊತೆಗೆ ಪಾಸ್ ಕೂಡ ಕೊಡುತ್ತಾರೆ ಎಂದರು. ಡಿ.ಕೆ.ಸುರೇಶ್ ಅವರ ರ್ಯಾಲಿಯಲ್ಲಿ ಕೆಲವರು ಪಾಕಿಸ್ತಾನ ಜೈ ಎಂದಿದ್ದಾರೆ. ಆದರೆ ಡಿ.ಕೆ.ಸುರೇಶ್ ಏನೂ ಮಾತಾಡದೆ ಸುಮ್ಮನೆ ನಿಂತಿದ್ದರು. ಈಗಾಗಲೇ ಅವರು ದೇಶ ಒಡೆಯುವ ಮಾತನಾಡಿದ್ದಾರೆ ಎಂದರು.
ಕೊಲೆಯಾದ ನೇಹಾ ತಂದೆ ಕಾಂಗ್ರೆಸ್ನ ಕಾರ್ಪೊರೇಟರ್ ಲವ್ ಜಿಹಾದ್ ಇದೆ ಎಂದಿದ್ದಾರೆ. ಕಾಂಗ್ರೆಸ್ ನಾಯಕರು ಹೀಗೆ ಮಾತನಾಡಿದರೆ ತಾವು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಕುಟುಂಬದವರು ಹೇಳಿದ್ದಾರೆ. ಇಷ್ಟಾದರೂ ಕಾಂಗ್ರೆಸ್ ನಾಯಕರು ಇದು ಲವ್ ಕೇಸ್ ಎಂದು ಮುಚ್ಚಿಹಾಕಲು ಯತ್ನಿಸಿದ್ದಾರೆ ಎಂದು ದೂರಿದರು.
ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ಗೆ ಚೊಂಬು ಗ್ಯಾರಂಟಿ. ರಾಹುಲ್ ಗಾಂಧಿಗೆ ನಾವು ಚೊಂಬು ಕಳುಹಿಸಿಕೊಡಲಿದ್ದು, ಅವರು ವಿದೇಶಕ್ಕೆ ಹೋಗಿ ಏನಾದರೂ ಮಾಡಲಿ. ಸೋತ ಬಳಿಕ ಅವರು ಖಂಡಿತ ವಿದೇಶಕ್ಕೆ ಹೋಗುತ್ತಾರೆ ಎಂದು ಕಿಡಿಕಾರಿದರು.