ಬೆಂಗಳೂರು: ಅಲ್ಪಸಂಖ್ಯಾತರ ಮಹಿಳೆಯರ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿದ್ದ ಸಂಘ ಪರಿವಾರದ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಜಾಮೀನು ಕೊಡಿಸಿದ ಕಾಂಗ್ರೆಸ್ ವಕೀಲನನ್ನು ಕಾಂಗ್ರೆಸ್ ಪಕ್ಷ ಉಚ್ಛಾಟನೆ ಮಾಡಿದೆ.
ಶ್ರೀರಂಗಪಟ್ಟಣದ ಕಾಂಗ್ರೆಸ್ನ ಕಾನೂನು ಘಟಕದ ಅಧ್ಯಕ್ಷರಾಗಿದ್ದ ಬಿ.ಚಂದ್ರೇಗೌಡರು ಕಲ್ಲಡ್ಕ ಪ್ರಭಾಕರ್ ಪರವಾಗಿ ವಕಾಲತ್ತು ವಹಿಸಿ ಮೂರನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಾದಿಸಿದ್ದರು. ಜನವರಿ 17 ರಂದು ನ್ಯಾಯಾಲಯ ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಜಾಮೀನು ಮಂಜೂರು ಮಾಡಿದೆ.
ವಿವಾದಿತ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕಾಂಗ್ರೆಸ್ ಸರ್ಕಾರ ಮೃದು ಧೋರಣೆ ಅನುಸರಿಸುತ್ತಿದೆ ಎಂಬ ಆರೋಪಗಳು ಮೊದಲಿನಿಂದಲೂ ಕೇಳಿಬಂದಿದ್ದವು.ಕಳೆದ ತಿಂಗಳು 24 ರಂದು ಶ್ರೀರಂಗಪಟ್ಟಣದಲ್ಲಿ ನಡೆದ ಹನುಮ ಸಂಕೀರ್ತನಾ ಯಾತ್ರೆಯಲ್ಲಿ ಭಾಷಣ ಮಾಡಿದ ಕಲ್ಲಡ್ಕ ಪ್ರಭಾಕರ್ ಭಟ್ ತ್ರಿವಳಿ ತಲಾಖ್ ಸಂಬಂಧಪಟ್ಟಂತೆ ಮುಸ್ಲಿಂ ಮಹಿಳೆಯರ ವಿರುದ್ಧ ನೀಡಿದ್ದ ಹೇಳಿಕೆ ವಿವಾದಕ್ಕೀಡಾಗಿತ್ತು.