ದಾವಣಗೆರೆ: ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಬಿಜೆಪಿ, ಕಾಂಗ್ರೆಸ್ ಎರಡೂ ಪಕ್ಷಗಳು ಪಂಚಮಸಾಲಿ ಸಮುದಾಯವನ್ನು ನಿರ್ಲಕ್ಷಿಸಿವೆ ಎಂದು ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹನಗವಾಡಿಯ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠಾಧ್ಯಕ್ಷ ವಚನಾನಂದ ಸ್ವಾಮೀಜಿ ಆರೋಪಿಸಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 2, ಬಿಜೆಪಿ 1 ಟಿಕೆಟ್ ನೀಡಿದೆ. ಆದರೆ ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ ಟಿಕೆಟ್ ನೀಡಿಲ್ಲ. ಪಂಚಮಸಾಲಿ ಸಮುದಾಯ ಹೆಚ್ಚಿರುವ ಕ್ಷೇತ್ರಗಳಲ್ಲೇ ಟಿಕೆಟ್ ನೀಡಿಲ್ಲ. ಕಡಿಮೆ ಜನಸಂಖ್ಯೆವುಳ್ಳ ಸಮುದಾಯಕ್ಕೆ ನಾಲ್ಕಕ್ಕಿಂತ ಹೆಚ್ಚಿನ ಟಿಕೆಟ್ ನೀಡಲಾಗಿದೆ. ಬಹುಸಂಖ್ಯಾತ ಪಂಚಮಸಾಲಿ ಸಮುದಾಯಕ್ಕೆ ಟಿಕೆಟ್ ತಪ್ಪಿಸಲಾಗಿದೆ. ಅನ್ಯಾಯ ಸರಿಪಡಿಸದಿದ್ದರೆ ಸಮಾಜ ಒಗ್ಗಟ್ಟಿನ ಮಂತ್ರ ಪಠಿಸಲು ಹಾಗೂ ಹರಿಹರ ಪೀಠದ ನೇತೃತ್ವದಲ್ಲಿ ಹೋರಾಟ ನಡೆಸಲು ತೀರ್ಮಾನ ಮಾಡಲಾಗುವುದು.
ಉತ್ತರ ಕರ್ನಾಟಕದ 15 ಜಿಲ್ಲೆಗಳಲ್ಲಿ ಪಂಚಮಸಾಲಿ ಸಬಲವಾಗಿದೆ. 80 ಲಕ್ಷ ಜನಸಂಖ್ಯೆ ಇರುವ ಸಮುದಾಯಕ್ಕೆ ಅನ್ಯಾಯವಾಗಿದೆ. ಸಮಾಜದ ಸದ್ಗುರು ಜೊತೆಗೂಡಿ ರಾಜ್ಯಾದಾದ್ಯಂತ ಹೋರಾಟ ನಡೆಸುತ್ತೇವೆ ಎಂದರು.
ಪಂಚಮಸಾಲಿ ಸಮುದಾಯಕ್ಕೆ ಬಿಜೆಪಿ 3 ಸೀಟ್ ನೀಡಬೇಕೆಂದು ಆಗ್ರಹ ಇದೆ. ಅಭ್ಯರ್ಥಿಗಳಿಗೆ ಬಿ ಫಾರಂ ಕೊಡಲು ಇನ್ನೂ ಸಮಯಾವಕಾಶವಿದೆ. ಟಿಕೆಟ್ ಕೊಡದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.
ಸುಮಾರು 15 ಲೋಕಸಭಾ ಕ್ಷೇತ್ರಗಳಲ್ಲಿ ಪರಿಣಾಮ ಬೀರಬಲ್ಲ ಪಲಿತಾಂಶ ನಿರ್ಣಾಯಕ ಶಕ್ತಿ ನಮ್ಮ ಸಮುದಾಯಕ್ಕಿದೆ. ರಾಜ್ಯದ ಆಕಾಂಕ್ಷಿಗಳು ನಮಗೆ ಕರೆ ಮಾಡಿ ತಮಗಾದ ಅನ್ಯಾಯ ತೋಡಿಕೊಂಡಿದ್ದಾರೆ.
ಟಿಕೇಟ್ ಹಂಚುವ ವಿಚಾರವಾಗಿ ಎರಡು ರಾಷ್ಟ್ರೀಯ ಪಕ್ಷಗಳು ಸಮಾಜವನ್ನು ನಿರ್ಲಕ್ಷ್ಯ ಮಾಡಿದ್ದಾರೆ. ಎರಡು ರಾಷ್ಟ್ರೀಯ ಪಕ್ಷಗಳು ಪಕ್ಷದಲ್ಲಿನ ನಿಷ್ಠಾವಂತ ನಾಯಕರಿಗೆ ಟಿಕೇಟ್ ಕೊಡಿ. ಇಲ್ಲವಾದರೆ ವ್ಯತಿರಿಕ್ತ ಪರಿಣಾಮಗಳುಂಟಾಗುವ ಸಾಧ್ಯತೆ ಇದೆ ಎಂದರು.