ಬೆಂಗಳೂರು: ಜಾತಿ ಗಣತಿ ವರದಿಗೆ ಸ್ವತಃ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೇ ವಿರೋಧ ವ್ಯಕ್ತಪಡಿಸಿದ್ದು, ಕಾಂತರಾಜ್ ಆಯೋಗದ ವರದಿ ತಿರಸ್ಕರಿಸಲು ಒಕ್ಕಲಿಗರ ಸಂಘ ಸಲ್ಲಿಸಿದ ಮನವಿ ಪತ್ರಕ್ಕೆ ಡಿಸಿಎಂ ಸಹಿ ಹಾಕಿದ್ದಾರೆ.
ಈ ಮೂಲಕ ಎಚ್. ಕಾಂತರಾಜು ನೇತೃತ್ವದ ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಸಿದ್ಧಪಡಿಸಿರುವ ‘ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ -2015’ ವರದಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅಧಿಕೃತವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ. ಕಾಂತರಾಜು ಆಯೋಗದ ವರದಿ ತಿರಸ್ಕರಿಸುವ ಸಂಬಂಧ ಒಕ್ಕಲಿಗರ ಸಂಘ ಮನವಿ ಪತ್ರವನ್ನು ಸಿದ್ಧಪಡಿಸಿತ್ತು. ಇದಕ್ಕೆ ಈಗ ಡಿ.ಕೆ. ಶಿವಕುಮಾರ್ ಅವರ ಸಹಿಯನ್ನು ಪಡೆದುಕೊಳ್ಳಲಾಗಿದ್ದು, ಆ ಪತ್ರವನ್ನು ಹಿಂದುಳಿದ ವರ್ಗಗಳ ಆಯೋಗಕ್ಕೆ ಸಲ್ಲಿಸಲಾಗಿದೆ. ಇದರ ಮನವಿ ಪ್ರತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಸಲ್ಲಿಸಲಾಗಿದೆ.
ಈ ಮನವಿ ಪತ್ರಕ್ಕೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ. ಕೃಷ್ಣ, ಎಚ್ ಡಿ ಕುಮಾರಸ್ವಾಮಿ, ಡಿ.ವಿ. ಸದಾನಂದಗೌಡ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಡಿಸಿಎಂ ಡಿ ಕೆ ಶಿವಕುಮಾರ್, ಪ್ರತಿಪಕ್ಷ ನಾಯಕ ಆರ್ ಅಶೋಕ್ ಹಾಗೂ ಮಾಜಿ ಸಚಿವ ಅಶ್ವತ್ಥನಾರಾಯಣ ಸೇರಿದಂತೆ ಹಲವು ಒಕ್ಕಲಿಗ ಸಮುದಾಯದ ಹಲವು ಶಾಸಕರು ಸಹಿ ಹಾಕಿದ್ದಾರೆ.