ಬೆಂಗಳೂರು: ಬೆಂಗಳೂರಿನಲ್ಲಿ ಡೆಂಗ್ಯೂ ಹಾವಳಿ ಮಿತಿ ಮೀರಿದ್ದು, ನೈರ್ಮಲ್ಯ ಕಾಪಾಡದಿರುವುದು ಸೊಳ್ಳೆಗಳ ಉತ್ಪತ್ತಿಗೆ ಕಾರಣವಾಗಿ ಮತ್ತಷ್ಟು ಸಮಸ್ಯೆಗೆ ಕಾರಣವಾಗುತ್ತಿದೆ. ಹೀಗಾಗಿ ಸ್ವಚ್ಛತೆ ಕಾಪಾಡದವರಿಗೆ ದಂಡ ವಿಧಿಸಲು ಬಿಬಿಎಂಪಿ ಮುಂದಾಗಿದೆ.
ವೈಯಕ್ತಿಕ ಜಾಗಗಳಲ್ಲಿ ಮತ್ತು ಪ್ರದೇಶಗಳಲ್ಲಿ ಸೊಳ್ಳೆ ಉತ್ಪತ್ತಿಗೆ ಕಾರಣವಾಗುವಂತೆ ಮಾಡುವ ಸಾರ್ವಜನಿಕರಿಗೆ ದಂಡ ವಿಧಿಸಲು ತೀರ್ಮಾನಿಸಲಾಗಿದೆ ಎಂದು ಬಿಬಿಎಂಪಿ ಮೂಲಗಳು ತಿಳಿಸಿವೆ.
ಖಾಸಗಿಯವರ ನಿವೇಶನ, ಜಾಗ ಅಥವಾ ಸ್ವತ್ತುಗಳಲ್ಲಿ ಸೊಳ್ಳೆ ಉತ್ಪತ್ತಿ ಕಂಡು ಬಂದಲ್ಲಿ ಮೊದಲಿಗೆ ಎಚ್ಚರಿಕೆ ನೀಡಲಾಗುತ್ತದೆ. ಅದಕ್ಕೆ ಸ್ಪಂದಿಸದಿದ್ದರೆ ಮೊದಲ ಹಂತದಲ್ಲಿ 50 ರೂ. ದಂಡ ವಿಧಿಸಲಾಗುತ್ತದೆ. ನಂತರ ಆ ಸ್ಥಳ ಸ್ವಚ್ಛವಾಗುವ ತನಕ ಪ್ರತಿ ನಿತ್ಯ 15 ರೂ. ದಂಡ ವಿಧಿಸಲು ತೀರ್ಮಾನಿಸಲಾಗಿದೆ. ಕರ್ನಾಟಕ ಮುನ್ಸಿಪಲ್ ಕಾಯ್ದೆ ಪ್ರಕಾರ ಅನೈರ್ಮಲ್ಯಕ್ಕೆ ದಂಡದ ಮೊತ್ತ ಕಡೆಮೆ ಇದೆ. ಇದನ್ನು ಹೆಚ್ಚಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಬಿಬಿಎಂಪಿ ಸಿದ್ಧತೆ ನಡೆಸಿದೆ ಎಂದು ಬಿಬಿಎಂಪಿ ಮೂಲಗಳಿಂದ ಅಧಿಕೃತ ಮಾಹಿತಿ ದೊರೆತಿದೆ.

