ಬೆಂಗಳೂರು: ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ನೀಡುವ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಇಂದು(ನ.16) ಘೋಷಣೆ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಶಾಲಾ ಮಕ್ಕಳಿಗಾಗಿ ನಡೆಸುತ್ತಿರುವ ಮಾಧ್ಯಾಹ್ನದ ಊಟ ಯೋಜನೆ ಚೆನ್ನಾಗಿ ಸಾಗುತ್ತಿದೆ. ಮಕ್ಕಳಿಗೆ ಪೌಷ್ಟಿಕಾಹಾರ ನೀಡಲು ನಿರ್ಧಾರ ಮಾಡಲಾಗಿದೆ. ಹೀಗಾಗಿ ಮಧ್ಯಾಹ್ನದ ಬಿಸಿಯೂಟದ ಜೊತೆ ರಾಗಿ ಮಾಲ್ಟ್ ಕೊಡುವ ನಿರ್ಧಾರ ಮಾಡಿದ್ದೇವೆ ಎಂದು ಹೇಳಿದರು.
ಮುಂದಿನ ತಿಂಗಳಿಂದ ರಾಗಿ ಮಾಲ್ಟ್ ಭಾಗ್ಯ ಯೋಜನೆಗೆ ಚಾಲನೆ ನೀಡಲಿದ್ದೇವೆ. ಮಕ್ಕಳಿಗೆ ಪೌಷ್ಟಿಕಾಂಶ ನೀಡುವ ನಿಟ್ಟಿನಲ್ಲಿ ರಾಗಿ ಮಾಲ್ಟ್ ನೀಡುವ ನಿರ್ಧಾರ ಕೈಗೊಂಡಿದ್ದೇವೆ. ಒಂದು ಎನ್ಜಿಒದವರು ಎರಡು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಜಾರಿ ಮಾಡಿದ್ದರು. ಅದು ಯಶಸ್ವಿಯಾಗಿದೆ. ಹೀಗಾಗಿ ಇದನ್ನು ಜಾರಿ ಮಾಡಲು ನಿರ್ಧಾರ ಮಾಡಲಾಗಿದೆ. ಕ್ಷೀರಭಾಗ್ಯದ ಹಾಲಿನ ಜೊತೆ ಬೆಳಗ್ಗೆ ರಾಗಿಗಂಜಿ ಕೊಡುವ ನಿರ್ಧಾರ ಕೂಡ ಕೈಗೊಳ್ಳಲಾಗಿದೆ ಎಂದು ಮಧು ಬಂಗಾರಪ್ಪ ತಿಳಿಸಿದರು.