ಬೆಂಗಳುರು: ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಶ್ರೀಮಂತ ದೇವಸ್ಥಾನಗಳಲ್ಲಿ ಸಂಗ್ರಹವಾಗುವ ನಿಧಿಯನ್ನು ಆದಾಯವಿಲ್ಲದ ಸಿ ವರ್ಗದ ದೇವಸ್ಥಾನಗಳಿಗಾಗಿ ಬಳಸುವುದನ್ನು ಕಡ್ಡಾಯಗೊಳಿಸುವ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ಮಸೂದೆಯನ್ನು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಸರ್ಕಾರಕ್ಕೆ ಹಿಂದಿರುಗಿಸಿದ್ದಾರೆ.
ʼಕೇವಲ ಹಿಂದೂ ಧಾರ್ಮಿಕ ಸಂಸ್ಥೆಗಳಿಗೆ ಸಂಬಂಧಿಸಿ ತರಲಾದ ತಿದ್ದುಪಡಿಯಲ್ಲಿ ಇತರೆ ಧಾರ್ಮಿಕ ಸಂಸ್ಥೆಗಳನ್ನೂ ಸೇರಿಸಿಕೊಳ್ಳುವ ಯೋಚನೆ ರಾಜ್ಯಸರ್ಕಾರಕ್ಕೆ ಇದಯೇ?ʼ ಎಂದು ರಾಜ್ಯಪಾಲರು ಪ್ರಶ್ನಿಸಿದ್ದಾರೆ.
ತಿದ್ದುಪಡಿ ಮಸೂದೆಯ ಪ್ರಕಾರ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆಯ ವ್ಯಾಪ್ತಿಯಲ್ಲಿರುವ ₹1 ಕೋಟಿಗೂ ಹೆಚ್ಚು ಆದಾಯ ಗಳಿಸುವ ದೇವಸ್ಥಾನಗಳ ಹುಂಡಿಯಿಂದ ವರ್ಷಕ್ಕೆ ಶೇ 10ರಷ್ಟು ಮತ್ತು ₹10 ಲಕ್ಷದಿಂದ ₹1 ಕೋಟಿವರೆಗಿನ ವರಮಾನ ಹೊಂದಿರುವ ದೇವಸ್ಥಾನಗಳಿಂದ ಶೇ 5ರಷ್ಟನ್ನು ಸಾಮಾನ್ಯ ಸಂಗ್ರಹಣಾ ನಿಧಿಗೆ ಸೇರಿಸುವುದು ಹಾಗು ಇದನ್ನು ಕಡಿಮೆ ಆದಾಯದ ಸಿ ವರ್ಗದ ದೇವಸ್ಥಾನಗಳಿಗೆ ಬಳಸುವುದನ್ನು ಕಡ್ಡಾಯ ಮಾಡಲಾಗುವುದು.
ಇದಕ್ಕೆ ಸಮರ್ಥನೆ ನೀಡಿರುವ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ, ಹೀಗೆ ಸಂಗ್ರಹವಾದ ನಿಧಿಯನ್ನು ಬಳಸಿಕೊಂಡು 34 ಸಾವಿರ ಮುಜರಾಯಿ ದೇವಸ್ಥಾನಗಳ ಅರ್ಚಕರಿಗೆ ವಿಮಾ ಸೌಲಭ್ಯ ಒದಗಿಸುವ ಪ್ರಸ್ತಾವ ಇಲಾಖೆಯ ಮುಂದಿದೆ ಎಂದರು.