ಬೆಂಗಳೂರು : ಕರ್ನಾಟಕದಲ್ಲಿ ಜುಲೈ 29ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಲೆನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಮುಂದಿನ ಒಂದು ವಾರ ಹೆಚ್ಚಿನ ಮಳೆಯಾಗಲಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ನೀಡಲಾಗಿದೆ. ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಹಾಗೆಯೇ, ವಿಜಯನಗರ, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಕಳೆದ 2 ದಿನದಲ್ಲಿ ಬೆಂಗಳೂರಲ್ಲಿ ಭಾರಿ ಮಳೆಯಾಗಿದೆ. ಸೋಮವಾರ ಹಾಗೂ ಮಂಗಳವಾರ ಎರಡು ದಿನ 12 ಮಿ.ಮಿ ಮಳೆಯಾಗಿದ್ದು, ಸಾರ್ವಜನಿಕರು ತೊಯ್ದು ತೊಪ್ಪೆಯಾಗಿದ್ದಾರೆ. ಇನ್ನು ಭಾರಿ ಮಳೆಯಿಂದಲೇ ಸಿಲ್ಕ್ ಬೋರ್ಡ್ ಜಂಕ್ಷನ್, ಗುಂಜೂರು ರಸ್ತೆ, ವರ್ತೂರು, ಮಾರತಹಳ್ಳಿ ಸೇತುವೆ, ಬೆಳ್ಳಂದೂರು, ಐಟಿಪಿಎಲ್ ಮುಖ್ಯ ರಸ್ತೆ, ಆಡುಗೋಡಿ ಜಂಕ್ಷನ್, ರೂಪೇನ ಅಗ್ರಹಾರ, ಬೊಮ್ಮನಹಳ್ಳಿ, ಪಾಣತ್ತೂರು ಜಂಕ್ಷನ್,

ಹೆಣ್ಣೂರಿನ ಕೆಇಬಿ ಜಂಕ್ಷನ್, ಕೊತ್ತನೂರು ಮುಖ್ಯ ರಸ್ತೆ ಮತ್ತು ಡೈರಿ ವೃತ್ತದ ಸಾಗರ್ ಮೆಟ್ರೋ ನಿಲ್ದಾಣದ ಬಳಿ ತೀವ್ರ ಸಂಚಾರ ದಟ್ಟಣೆ ಸಮಸ್ಯೆ ಕಂಡು ಬಂದಿತ್ತು. ಈ ಬಾರಿ ಕರ್ನಾಟಕದ ಬಹುತೇಕ ಎಲ್ಲ ಜಿಲ್ಲೆಗಳಲ್ಲೂ ಮಳೆಯು ತನ್ನ ಆರ್ಭಟ ತೋರಿದ್ದು, ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 4 ದಿನಗಳ ಕಾಲ ದೊಡ್ಡ ಅವಾಂತರ ಸೃಷ್ಟಿಯಾಗುವ ಸಾಧ್ಯತೆ ಇದೆ. ಜಿಲ್ಲಾಡಳಿತಗಳು ಮುಂಜಾಗ್ರತಾ ಕ್ರಮ ಕೂಡ ಕೈಗೊಂಡು ಎಚ್ಚರಿಕೆ ವಹಿಸಲಾಗಿದೆ.

ಇನ್ನು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗ್ತಿದ್ದು, ಜನರು ಹೈರಾಣಾಗಿದ್ದಾರೆ.ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಸೂಚನೆ ನೀಡಿದೆ. 50 ಕಿಮೀ ವೇಗದ ಬಿರುಗಾಳಿ, 4-6 ಅಡಿ ಎತ್ತರದ ಅಲೆಗಳ ಮೇಲೇಳುವ ಎಚ್ಚರಿಕೆ ನೀಡಲಾಗಿದೆ. ಕರಾವಳಿ ಜಿಲ್ಲೆಯಾದ ಉಡುಪಿಯಲ್ಲಿ ಮುಂದಿನ ಏಳು ದಿನಗಳ ಕಾಲ ವರುಣ ಅಬ್ಬರಿಸಲಿದ್ದಾನೆ ಎನ್ನಲಾಗಿದ್ದು, ಮಂಗಳೂರಲ್ಲಿ ಭಾರಿ ಮಳೆಯಾಗಲಿದೆ ಎಂದು ಅಂದಾಜಿಸಲಾಗಿದೆ.