ಬೆಂಗಳೂರು: ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ನಾನು ಜೋಡೆತ್ತುಗಳಾಗಿ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ತರಲು ನಾವು ಕೆಲಸ ಮಾಡುತ್ತೇವೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಎರಡು ಗುಂಪುಗಳಾಗಿವೆ. ಅಧಿಕಾರಕ್ಕೆ ಬಂದ ತಕ್ಷಣವೇ ವರ್ಗಾವಣೆ ದಂಧೆ ಶುರು ಮಾಡಿದೆ.
ಕಾಂಗ್ರೆಸ್ನವರು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ್ರು. ಆದರೆ ಗ್ಯಾರಂಟಿ ಯೋಜನೆ ಶೇಕಡಾ 50ರಷ್ಟು ಜನರಿಗೂ ತಲುಪಿಲ್ಲ ಎಂದು ಕಿಡಿಕಾರಿದ್ದಾರೆ. ನಾವು ಅಧಿಕಾರದಲ್ಲಿದ್ದಾಗ ರೈತರ ಪರ ನಿಂತಿದ್ದೆವು. ಆದರೆ ಈಗ ಕಾಂಗ್ರೆಸ್ ಸರ್ಕಾರ ರೈತರ ಯೋಜನೆಗಳನ್ನೇ ನಿಲ್ಲಿಸಿದೆ. ಕರ್ನಾಟಕ ಕಾಂಗ್ರೆಸ್ ಸರ್ಕಾರ ರೈತರಿಗೆ ಮೋಸ ಮಾಡುತ್ತಿದೆ. ಕಾಂಗ್ರೆಸ್ ಸರ್ಕಾರ ನಮ್ಮ ಶಾಸಕರ ಅನುದಾನ ಕಡಿತಗೊಳಿಸಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ.
ಮಾತು ಮುಂದುವರೆಸಿ, ನನ್ನನ್ನು ವಿಪಕ್ಷ ನಾಯಕನಾಗಿ ಆಯ್ಕೆ ಮಾಡಲಾಗಿದೆ. ನಾನೊಬ್ಬನೇ ನಾಯಕ ಅಲ್ಲ. ಇರುವ 66 ಶಾಸಕರೂ ವಿಪಕ್ಷ ನಾಯಕರೇ. ಈಗ ನಮ್ಮ ಜತೆ ಜೆಡಿಎಸ್ ಕೂಡ ಸೇರಿದೆ. ಎನ್ಡಿಎ ಭಾಗವಾಗಿ ಜೆಡಿಎಸ್ ಕಾರ್ಯನಿರ್ವಹಿಸುತ್ತದೆ. ನಾವೆಲ್ಲರೂ ಸೇರಿ 84 ಜನ ಶಾಸಕರಾಗಿದ್ದೇವೆ. ನಮ್ಮ ಮೊದಲ ಆದ್ಯತೆ ಭ್ರಷ್ಟಾಚಾರದ ಕಾಂಗ್ರೆಸ್ ಸರ್ಕಾರವನ್ನು ತೊಲಗಿಸೋದು. ನಿಮ್ಮೆಲ್ಲರ ಸಹಕಾರ ಬೇಕು. ಆರು ತಿಂಗಳ ಈ ಭ್ರಷ್ಟಾಚಾರದ ಸರ್ಕಾರವನ್ನು ಕಿತ್ತೊಗೆಯೋಣ ಎಂದರು.
ಈ ಬಾರಿ 28ಕ್ಕೆ 28 ಸ್ಥಾನ ಗೆಲ್ಲಬೇಕು. ಈ ನಿಟ್ಟಿನಲ್ಲಿ ನಿಮ್ಮೆಲ್ಲರ ಸಹಕಾರ ಮುಖ್ಯ. ನಾನು ಆ ನಿಟ್ಟಿನಲ್ಲಿ ದುಡಿಯುತ್ತೇನೆ. ನಿಮ್ಮೆಲ್ಲರ ಸಹಕಾರದಿಂದ ಆಯ್ಕೆಯಾಗಿದ್ದೇನೆ. ನನ್ನ ಮೇಲೆ ವಿಶ್ವಾಸ ಇಟ್ಟಿದ್ದೀರಿ. ನಿಮ್ಮೆಲ್ಲರ ಸಹಕಾರ ಪಡೆದು ಕೆಲಸ ಮಾಡುತ್ತೇನೆ. ಯಾವುದೇ ದ್ವೇಷ ಇಲ್ಲದೆ, ಎಲ್ಲರ ಜತೆಗೆ ಹೋಗೋಣ ಎಂದು ಆರ್. ಅಶೋಕ್ ಹೇಳಿದರು.