ಬೆಂಗಳೂರು: ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ನಡೆಸಿದ ಆರೋಪ ಸಂಬಂಧ ಹಿರಿಯ ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಅವರಿಗೆ ಕರ್ನಾಟಕ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. 5 ಲಕ್ಷ ಮೌಲ್ಯದ ಬಾಂಡ್ ಇಬ್ಬರು ಶ್ಯೂರಿಟಿ ಒದಗಿಸಬೇಕು, ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು, ಕೋರ್ಟ್ ಆನುಮತಿಯಿಲ್ಲದೇ ವಿದೇಶಕ್ಕೆ ಪ್ರಯಾಣಿಸುವಂತಿಲ್ಲ ಎಂದು ಷರತ್ತು ವಿಧಿಸಿದೆ.
ನೇಮಕಾತಿ ಪ್ರಕರಣ ಸಂಬಂಧ ಕಿರಿಯ ತನಿಖಾಧಿಕಾರಿಗಳು ಅಮೃತ್ ಪಾಲ್ ಅವರನ್ನು ತನಿಖೆ ನಡೆಸುತ್ತಿದ್ದಾರೆ. ಇವರಿಗೆ ಬೆದರಿಕೆ ಹಾಕದಂತೆ ಷರತ್ತು ವಿಧಿಸುವಂತೆ ಎಸ್ಪಿಪಿ ಪ್ರಸನ್ನ ಕುಮಾರ್ ಅವರು ಹೈಕೋರ್ಟ್ಗೆ ಮನವಿ ಮಾಡಿದ್ದರು. ಅದರಂತೆ ತನಿಖಾಧಿಕಾರಿಗಳಿಗೆ ಬೆದರಿಕೆ ಹಾಕದಂತೆ ಷರತ್ತು ಕೋರ್ಟ್ ವಿಧಿಸಿದೆ.
ಏನಿದು ಪಿಎಸ್ಐ ನೇಮಕಾತಿ ಹಗರಣ:
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ 545 ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಇದಾಗಿದೆ. ಅಕ್ಟೋಬರ್ 3, 2021 ರಲ್ಲಿ 545 ಪರೀಕ್ಷೆ ನಡೆಸಲಾಗಿತ್ತು. ಆದರೆ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ಅಭ್ಯರ್ಥಿಗಳು ಆರೋಪ ಮಾಡಿ ದೂರನ್ನು ನೀಡಿದ್ದರು. ಪಿಎಸ್ಐ ಪರೀಕ್ಷೆಯಲ್ಲಿ 21 ಪ್ರಶ್ನೆಗಳಿಗೆ ಉತ್ತರಿಸಿದ ಅಭ್ಯರ್ಥಿ 100 ಅಂಕಗಳನ್ನು ಪಡೆದಿದ್ದರು. ಖಾಲಿ OMR ಶೀಟ್ಗಳನ್ನು ನಂತರ ಭರ್ತಿ ಮಾಡಲಾಗಿದೆ ಎಂಬ ಆರೋಪವೂ ಇದೆ.
ಉತ್ತರ ಕರ್ನಾಟಕದ ಭಾಗದ ಕೆಲವು ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಟಿವಿ ಇಲ್ಲದೆ ಇದ್ದಿದ್ದು, ಬ್ಲೂಟೂಥ್ ಬಳಸಿಕೊಂಡು ಪರೀಕ್ಷೆಯನ್ನು ಬರೆದಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಎಲ್ಲ ಹಿನ್ನೆಲೆಯಲ್ಲಿ ಪ್ರಕರಣದ ಸ್ವರೂಪ ತೀವ್ರಗೊಂಡ ಬಳಿಕ ಸರ್ಕಾರ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿತ್ತು.
ಪಿಎಸ್ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಕಲಬುಗರಿ ಜಿಲ್ಲೆಯ ಬಿಜೆಪಿ ನಾಯಕಿಯ ಹೆಸರು ತಳುಕು ಹಾಕಿಕೊಂಡಿದೆ. ಜಿಲ್ಲೆಯ ಜ್ಞಾನಜ್ಯೋತಿ ಇಂಗ್ಲಿಷ್ ಮಾಧ್ಯಮ ಶಾಲೆಯ ಮುಖ್ಯಸ್ಥೆ ಹಾಗೂ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಮನೆಯ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ನಡೆಸಿ, ಕೊನೆಗೂ ಆಕೆಯನ್ನು ಬಂಧಿಸಿದ್ದರು.
ಈಗಲೂ ಪ್ರಕರಣ ವಿಚಾರಣೆ ಹಂತದಲ್ಲಿದೆ. ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿ ಹಲವು ಸಚಿವರು ಹಾಗೂ ಅಧಿಕಾರಿಗಳು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ವಿರೋಧ ಪಕ್ಷಗಳು ಆರೋಪಿಸಿದ್ದವು. ಇನ್ನು ಹಗರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಎಡಿಜಿಪಿ ಅಮೃತ್ ಪಾಲ್ ಅವರನ್ನು ಕೂಡ ಬಂಧಿಸಲಾಗಿತ್ತು. ಅವರ ತನಿಖೆ ಇನ್ನೂ ನಡೆಯುತ್ತಲೇಯಿದೆ.