ಬೆಂಗಳೂರು: ಆಗಸ್ಟ್ 15ರಂದು 76ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಹಿನ್ನೆಲೆ ಬೆಂಗಳೂರಿನ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ಭರ್ಜರಿ ಸಿದ್ಧತೆಗಳು ಶುರುವಾಗಿವೆ. ಜೊತೆಗೆ ಭಾರಿ ಭದ್ರತೆ ಕೈಗೊಳ್ಳಲಾಗುತ್ತಿದೆ.
ಕೆಎಸ್ಆರ್ಪಿ, ಸಿಎಆರ್, ಹೋಮ್ಗಾರ್ಡ್, ಸಂಚಾರಿ ಪೊಲೀಸರು ಸೇರಿದಂತೆ 1350 ಪೊಲೀಸ್ ಸಿಬ್ಬಂದಿ, 38 ತುಕಡಿಗಳು ಭದ್ರತೆಗೆ ನಿಯೋಜನೆ ಮಾಡಲಾಗುತ್ತದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಹಾಗೂ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ ತಯಾರಿ ಬಗ್ಗೆ ಮಾಹಿತಿ ನೀಡಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ಕಾರ್ಯಕ್ರಮವಿರಲಿದ್ದು ಭದ್ರತಾ ದೃಷ್ಟಿಯಿಂದ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗುತ್ತಿದೆ. ಮಾಣಿಕ್ ಶಾ ಪರೇಡ್ ಮೈದಾನದ ಸುತ್ತ 100 ಸಿಸಿಟಿವಿ ಅಳವಡಿಸಲಾಗುತ್ತದೆ. ಆಗಸ್ಟ್ 15 ರಂದು ಬೆಳಗ್ಗೆ 9 ಗಂಟೆಗೆ ಸಿಎಂ ಸಿದ್ದರಾಮಯ್ಯನವರು ಧ್ವಜಾರೋಹಣ ಮಾಡಲಿದ್ದಾರೆ. ಬಳಿಕ ತೆರೆದ ಜೀಪಿನಲ್ಲಿ ಪರೇಡ್ ವೀಕ್ಷಿಸಲಿದ್ದಾರೆ.