ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯದ ಸಿಬಿಎಸ್ಸಿ, ಸಿಐಎಸ್ಸಿಇ ಪಠ್ಯಕ್ರಮ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆ ಕಲಿಕೆಯನ್ನು ಕಡ್ಡಾಯಗೊಳಿಸಿ ಕಾನೂನು ಜಾರಿಗೊಳಿಸಿರುವ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಸಿಬಿಎಸ್ಸಿ ಮತ್ತು ಸಿಐಎಸ್ಸಿಇ ಸಂಯೋಜಿತ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳ 19 ಮಂದಿ ಪೋಷಕರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ಹಾಗೂ ನ್ಯಾ. ಎಂ.ಜಿ.ಎಸ್. ಕಮಾಲ್ ಅವರಿದ್ದ ವಿಭಾಗೀಯ ನ್ಯಾಯಪೀಠ ರಾಜ್ಯ ಸರ್ಕಾರ ಹಾಗೂ ಇತರ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ ಆದೇಶಿಸಿತು.
ಕನ್ನಡ ಭಾಷಾ ಕಲಿಕೆ ಅಧಿನಿಯಮ-2015 ಹಾಗೂ ಕನ್ನಡ ಭಾಷಾ ಕಲಿಕೆ ನಿಯಮಗಳು-2017ರ ಅನ್ವಯ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವೀತೀಯ ಭಾಷೆಯಾಗಿ ಕಡ್ಡಾಯವಾಗಿದೆ. ಆದರೆ, ಕರ್ನಾಟಕ ಶಿಕ್ಷಣ ಸಂಸ್ಥೆಗಳು(ನಿರಾಕ್ಷೇಪಣಾ ಪ್ರಮಾಣ ಪತ್ರ ಮತ್ತು ನಿಯಂತ್ರಣ) ನಿಯಮ 2022ರ ಪ್ರಕಾರ ಎರಡನೇ ಅಥವಾ ಮೂರನೇ ಭಾಷೆಯಾಗಿ ಕಡ್ಡಾಯ ಎಂಬುದಾಗಿ ತಿಳಿಸುತ್ತವೆ. ಈ ಅಂಶಗಳು ಕರ್ನಾಟಕ ಶಿಕ್ಷಣ ಕಾಯ್ದೆ 1983ಕ್ಕೆ ತದ್ವಿರುದ್ಧವಾಗಿವೆ. ಅಲ್ಲದೆ, ಸಿಬಿಎಸ್ಸಿ ಮತ್ತು ಸಿಐಎಸ್ಸಿಇ ಈ ಕಾಯ್ದೆಗಳ ವ್ಯಾಪ್ತಿಯಿಂದ ಹೊರಗಡೆ ಇದ್ದಾವೆ.
ಅಲ್ಲದೆ, ಕರ್ನಾಟಕ ಶಿಕ್ಷಣ ಕಾಯ್ದೆ 1998ರ ತಿದ್ದುಪಡಿ ಮಾಡುವ ಮೂಲಕ ಸಿಬಿಎಸ್ಇ ಮತ್ತು ಸಿಐಎಸ್ಸಿಇ ಶಾಲೆಗಳು ಮತ್ತು ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶುಲ್ಕ ನಿಗದಿ ಮಾಡುವುದಕ್ಕೆ ಅವಕಾಶ ಕಲ್ಪಿಸಿದ್ದ ನಿಯಮಗಳನ್ನು ಅಸಾಂವಿಧಾನಿಕ ಎಂದು ಹೈಕೋರ್ಟ್ನ ವಿಭಾಗೀಯ ನ್ಯಾಯಪೀಠ ಇತ್ತೀಚೆಗೆ ಆದೇಶಿಸಿದೆ.