ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಭದ್ರತೆ ಕಾಡುತ್ತಿದ್ದು, ಸ್ವತಂತ್ರವಾಗಿ ಕೆಲಸ ಮಾಡಲು ‘ಗಾಂಧಿ ಪರಿವಾರ’ ಅವಕಾಶ ನೀಡುತ್ತಿಲ್ಲ ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್ ಹೇಳಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಲೆಹರ್ ಸಿಂಗ್, ಖರ್ಗೆ ಮಾದರಿ ನಾಯಕರಾಗುತ್ತಾರೆ ಎಂದು ನಾವು ಊಹಿಸಿದ್ದೆವು. ಆದರೆ ನಮಗೆ ನಿರಾಶೆಯಾಗಿದೆ. ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ಚಲಾಯಿಸಲು ಅವರಿಗೆ ಸ್ವಾತಂತ್ರ್ಯ ನೀಡಿಲ್ಲ. ಹೆಸರಿಗೆ ಮಾತ್ರ ಹುದ್ದೆ ನೀಡಲಾಗಿದೆ,” ಎಂದರು.
ಖರ್ಗೆ ಅವರಿಗೆ ರಾಜಕೀಯ ಕಾರ್ಯದರ್ಶಿಯನ್ನು ನೇಮಿಸಿಕೊಳ್ಳಲು ಅವಕಾಶವಿಲ್ಲ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರ ಕೈ ಕೆಳಗೆ ಕೆಲಸ ಮಾಡುವಂತೆ ಒತ್ತಾಯಿಸಲಾಗುತ್ತಿದೆ. ಪ್ರಿಯಾಂಕಾ ಪತಿ ರಾಬರ್ಟ್ ವಾದ್ರಾ ಅವರಿಂದಲೂ ಕೆಲ ನಿರ್ದೇಶನ, ಆದೇಶಗಳು ಖರ್ಗೆ ಅವರಿಗೆ ಬರುತ್ತದೆ ಎಂದರು. ಇಂತಹ ಒತ್ತಡ, ಒತ್ತಾಯಗಳಿಂದ ಖರ್ಗೆ ಹೊರಬಂದು ಸ್ವತಂತ್ರವಾಗಿ ಕಾರ್ಯನಿರ್ವಹಿಸಬೇಕು ಎಂದರು.