ಕೋಲಾರ: ಜಿಲ್ಲೆಯ ಮಾಲೂರು ತಾಲೂಕಿನ ಯಲುವಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳನ್ನು ಮಲದ ಗುಂಡಿಯೊಳಗೆ ಇಳಿಸಿ ಕ್ಲೀನ್ ಮಾಡಿಸಿದ ಪ್ರಕರಣ ಸಂಬಂಧ ನಾಲ್ವರು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.
ಪ್ರಾಂಶುಪಾಲೆ ಭಾರತಮ್ಮ, ಶಿಕ್ಷಕ ಅಭಿಷೇಕ್ ಹಾಗೂ ವಾರ್ಡನ್ ಮಂಜುನಾಥ್ ಸೇರಿ ಕೆಲವು ಶಿಕ್ಷಕರು ಕಳೆದ ಹಲವು ದಿನಗಳಿಂದ ಮಕ್ಕಳಿಗೆ ಹೊಡೆಯುವುದು, ರಾತ್ರಿ ಹೊತ್ತಿನಲ್ಲಿ ಬ್ಯಾಗ್ ಹೊರಿಸಿ ಕೂರಿಸಿ ಹಿಂಸೆ ನೀಡುವುದು ಸೇರಿದಂತೆ ವಿವಿಧ ರೀತಿಯಲ್ಲಿ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.
ಇದರ ಬೆನ್ನಲ್ಲೇ ಮಕ್ಕಳಿಂದ ಶೌಚಾಲಯದ ಹೊಂಡ ಸ್ವಚ್ಛಗೊಳಿಸಿದ ವಿಡಿಯೋ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ವಸತಿ ಶಾಲೆಗೆ ಭೇಟಿ ನೀಡಿದ್ದ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸ್, ಪರಿಶೀಲನೆ ನಡೆಸಿದ್ದರು. ಬಳಿಕ ಮಾತನಾಡಿದ್ದ ಅವರು, ಶೌಚಾಲಯ ಕ್ಲೀನ್ ಮಾಡಿಸಿದವರನ್ನು ಅಮಾನತು ಮಾಡುತ್ತೇವೆ. ಶಿಕ್ಷಕ ಅಭಿಷೇಕ್ನನ್ನು ಕೆಲಸದಿಂದ ತೆಗೆದು ಹಾಕುತ್ತೇವೆ ಎಂದು ಹೇಳಿದ್ದರು. ಸದ್ಯ ನಾಲ್ವರನ್ನು ಅಮಾನತು ಮಾಡಲಾಗಿದೆ ಎಂದು ತಿಳಿದು ಬಂದಿದೆ.