ಬೆಂಗಳೂರು: ಬೆಂಗಳೂರಿನ ಬಿಜೆಪಿ ರಾಜ್ಯ ಕಚೇರಿಯಲ್ಲಿ ಸಂಸದರು, ಶಾಸಕರು, ಪರಾಜಿತ ಅಭ್ಯರ್ಥಿಗಳು, ಪದಾಧಿಕಾರಿಗಳ ಸಭೆ ನಡೆಯಿತು.
2024ರ ಲೋಕಸಭೆ ಚುನಾವಣೆ ಹಿನ್ನೆಲೆ ಮತದಾರರ ಜಾಗೃತಿ ಅಭಿಯಾನದ ಭಾಗವಾಗಿ ಈ ಸಭೆ ನಡೆದಿದ್ದು, ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ನೇತೃತ್ವದಲ್ಲಿ ನಡೆದ ಸಭೆಗೆ ಶಾಸಕರಾದ ಎಸ್.ಟಿ. ಸೋಮಶೇಖರ್ ಶಿವರಾಮ ಹೆಬ್ಬಾರ್, ಮಾಜಿ ಸಚಿವರಾದ ಶಂಕರ ಪಾಟೀಲ್ ಮುನೇನಕೊಪ್ಪ, ವಿ ಸೋಮಣ್ಣ ಗೈರಾಗಿದ್ದಾರೆ.
ಅಲ್ಲದೆ ಶಿವಮೊಗ್ಗ ವಿಮಾನಯಾನ ಆರಂಭದ ಹಿನ್ನೆಲೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಮಾಜಿ ಸಚಿವರಾದ ಕೆ.ಎಸ್. ಈಶ್ವರಪ್ಪ, ಅರಗ ಜ್ಞಾನೇಂದ್ರ, ಶಾಸಕ ಬಿ.ವೈ. ವಿಜಯೇಂದ್ರ, ಮಾಜಿ ಶಾಸಕ ಹರತಾಳು ಹಾಲಪ್ಪ ಅವರು ಸಭೆಗೆ ಗೈರಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆರೋಗ್ಯ ಸಮಸ್ಯೆ ಹಿನ್ನೆಲೆ ಸಭೆಗೆ ಆಗಮಿಸಿಲ್ಲ.
ಸಭೆಗೆ ಗೈರಾದ ಬಗ್ಗೆ ಪ್ರತಿಕ್ರಿಯೆ ನೀಡಿದ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ, ನನಗೆ ನೋಟಿಸ್ ಕೊಟ್ಟಿದ್ದಾರೆ, ಆ ನೋಟಿಸ್ ವಾಪಸ್ಸು ಪಡೆಯಬೇಕು ಅದಕ್ಕೆ ಸಭೆಗೆ ಹಾಜರಾಗುತ್ತಿಲ್ಲ ಎಂದರು. ನಾನು ಏನು ಹೇಳಬೇಕೊ ಅದನ್ನ ಹೇಳಿದ್ದೇನೆ. ಇದರಿಂದ ನನಗೆ ವೈಕ್ತಿಕವಾಗಿ ಯಾವುದೇ ಲಾಭನು ಇಲ್ಲ, ನಷ್ಟನು ಇಲ್ಲ. ನಾನೊಬ್ಬ ಸಾಮಾನ್ಯ ಕಾರ್ಯಕರ್ತರ. ಅಪೇಕ್ಷೆಯಂತೆ ಇರುವುದನ್ನು ನೇರವಾಗಿ ಹೇಳಿದ್ದೇನೆ. ಯಡಿಯೂರಪ್ಪ ಅವರಂತ ನಾಯಕರನ್ನ ಕಡೆಗಣಿಸಿದ್ದಾರೆ. ಇದು ಬಿಜೆಪಿಗೆ ಶಾಪವಾಗಿದೆ. ವರ್ಚಸ್ಸು ಇರುವವರನ್ನ ಬೆಳೆಯಲು ಬಿಡುತ್ತಿಲ್ಲ. ವಿಜಯೇಂದ್ರ ಅಂತವರನ್ನ ಮೂಲೆಗುಂಪು ಮಾಡಿದ್ದಾರೆ. ನಾನು ನೇರವಾಗಿ ಮಾತನಾಡಿದ್ದೇನೆ. ಅದಕ್ಕೆ ಶಿಸ್ತು ಕ್ರಮ ತೆಗೆದುಕೊಂಡಿದ್ದಾರೆ ಎಂದರು.
ನಾನು ಪಕ್ಷ, ಮೋದಿ, ನಡ್ಡಾ ಅಮಿತ್ ಶಾ ವಿರುದ್ದ ಮಾತಾಡಿಲ್ಲ. ನಾನು ಮಾತಾಡಿರುವುದು ಕೆಲ ವ್ಯಕ್ತಿಗಳ ದೌರ್ಬಲ್ಯವನ್ನು. ರಾಜ್ಯದ ಜನತೆಗೆ ತಪ್ಪು ಸಂದೇಶ ಹೋಗಿದೆ. ವಿಪಕ್ಷ ಹಾಗೂ ಅಧ್ಯಕ್ಷ ಸ್ಥಾನ ಆಯ್ಕೆಯಾಗಿಲ್ಲ. ಇದನ್ನ ನಾಲ್ಕು ಗೋಡೆಗಳ ಮಧ್ಯೆ ಚರ್ಚೆ ಮಾಡಬೇಕು. ಕೆಲವರು ದುರಹಂಕಾರ ಭ್ರಮೆ ಲೋಕದಲ್ಲಿವರಂತೆ ಆಡುತ್ತಾರೆ. ಅದಕ್ಕೆ ಈ ಪಕ್ಷಕ್ಕೆ ಹಿನ್ನಡೆಯಾಗಿದೆ. ಲೋಕಸಭೆಗೆ ಇದು ಆಗಬಾರದು ಅನ್ನೋದು ನಮ್ಮ ಉದ್ದೇಶ ಎಂದರು.