ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಕ್ಕೆ ಅನುದಾನ ಕೈಬಿಟ್ಟಿರುವ ಹಿನ್ನೆಲೆಯಲ್ಲಿ ಅನುದಾನ ಬಿಡುಗಡೆಗೆ ಆಗ್ರಹಿಸಿ ಬಿಜೆಪಿ ಶಾಸಕ ಮುನಿರತ್ನ ಅವರು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಉಪವಾಸ ಪ್ರತಿಭಟನೆ ಕೈಗೊಂಡರು.
ಮುನಿರತ್ನ ಜೊತೆ ಪ್ರತಿಭಟನೆ ಮಾಡುತ್ತಿದ್ದ ಎಲ್ಲ ಪ್ರತಿಭಟನಾನಿರತ 25ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದರು. ಆದರೆ ಮುನಿರತ್ನ ಅವರು ಏಕಾಂಗಿಯಾಗಿ ಪ್ರತಿಭಟನೆ ಮುಂದುವರಿಸಿದರು.
ರಾಜರಾಜೇಶ್ವರಿ ನಗರ ಕ್ಷೇತ್ರಕ್ಕೆ ನೀಡಬೇಕಿದ್ದ ಅನುದಾನ ಕಡಿತಗೊಳಿಸಿ, ಯಶವಂತಪುರ, ಬ್ಯಾಟರಾಯನಪುರ ಸೇರಿ ಬೇರೆ ಕ್ಷೇತ್ರಕ್ಕೆ ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಮುನಿರತ್ನ ಅವರು ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಆಗಮಿಸಿ ಅವರ ಮನವೊಲಿಕೆ ನಂತರ ಪ್ರತಿಭಟನೆ ಕೈಬಿಟ್ಟರು.
ಈ ಬಳಿಕ ಮಾತನಾಡಿದ ಮುನಿರತ್ನ ಚುನಾವಣಾ ಫಲಿತಾಂಶ ಬಂದ ದಿನದಿಂದ ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಶಾಸಕನಾಗಿ ಕೆಲಸ ಮಾಡಲು ಕಷ್ಟ ಆಗುತ್ತಿದೆ. ಪೊಲೀಸ್ ದೌರ್ಜನ್ಯ, ಕಾಂಗ್ರೆಸ್ ಬೆಂಬಲಿಗರಿಂದ ಸಾರ್ವಜನಿಕರಿಗೆ ಕಿರುಕುಳ ಹೆಚ್ಚಾಗುತ್ತಿದೆ. ನಾನು ಒಂದು ವಾರ್ಡ್ ತನಿಖೆಗೆ ಪತ್ರ ಬರೆದರೆ ಇಡೀ ಕ್ಷೇತ್ರದ ಹಣ ತಡೆದಿದ್ದಾರೆ. ಪರಾಜಿತ ಅಭ್ಯರ್ಥಿ ಮತ್ತು ಅವರ ತಂದೆ ನೇರವಾಗಿ ಅಧಿಕಾರಿಗಳ ಸಭೆ, ದೂರವಾಣಿಯಲ್ಲಿ ಮಾಡುತ್ತಿದ್ದಾರೆ. ಡಿ.ಕೆ. ಸುರೇಶ್ ಅವರು ಸಂಸದರಾಗಿರುವ ಕ್ಷೇತ್ರಕ್ಕೆ ಹಣ ಕೊಡಿಸುವುದು ಅವರ ಕರ್ತವ್ಯ. ಅನುದಾನ ಬೇರೆಡೆ ವರ್ಗಾವಣೆ ಮಾಡಿದರೂ ಒಂದೇ ಒಂದು ಮಾತು ಮಾತಾಡಿಲ್ಲ. ಎಲ್ಲಾ ಶಾಸಕರನ್ನು ನೋಡುವ ರೀತಿಯಲ್ಲೇ ನನ್ನನ್ನೂ ನೋಡಿ ಎಂದು ಮನವಿ ಮಾಡಿದರು.