ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಪ್ರಧಾನಿ ಮೋದಿ ಭೇಟಿಗೆ ಕೊನೆಗೂ ಸಮಯ ನಿಗದಿಯಾಗಿದೆ. ಇಂದು ದೆಹಲಿಯಲ್ಲಿ ಪ್ರಧಾನಿ ಮೋದಿ ಅವರನ್ನು ಬೆಳಗ್ಗೆ 11 ಗಂಟೆಗೆ ಭೇಟಿ ಮಾಡಿ ರಾಜ್ಯದಲ್ಲಿನ ಬರ ಪರಿಸ್ಥಿತಿ ಕುರಿತು ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸಲಿದ್ದಾರೆ. ಕರ್ನಾಟಕವು ಕೇಂದ್ರದಿಂದ 18,171.44 ಕೋಟಿ ರೂಪಾಯಿ ಬರ ಪರಿಹಾರ ಕೋರಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ನಿಧಿಯಡಿ ಕರ್ನಾಟಕವು ಇಷ್ಟು ಪರಿಹಾರಕ್ಕೆ ಅರ್ಹವಾಗಿದೆ ಎಂದು ಹೇಳಲಾಗುತ್ತಿದೆ.
ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಬರ ಪರಿಹಾರಕ್ಕೆ ಕೇಂದ್ರದಿಂದ ಒಂದು ಪೈಸೆಯೂ ಬಿಡುಗಡೆಯಾಗಿಲ್ಲ ಎಂದು ಪ್ರಧಾನಿಯನ್ನು ಟೀಕಿಸುತ್ತಿದ್ದ ಸಿದ್ದರಾಮಯ್ಯ, ಕರ್ನಾಟಕದ ಸಚಿವರು ಭೇಟಿ ಮಾಡಲು ಯತ್ನಿಸಿದರೂ ಪ್ರಧಾನಿ ಮೋದಿ ಹಾಗೂ ಕೇಂದ್ರ ಸಚಿವರು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ಹೇಳುತ್ತಿದ್ದರು.
ಮುಖ್ಯಮಂತ್ರಿಗಳಾದ ಬಳಿ ಸಿದ್ದರಾಮಯ್ಯನವರು ಈಗ 2ನೇ ಬಾರಿ ಅಧಿಕೃತವಾಗಿ ಪ್ರಧಾನ ಮಂತ್ರಿಗಳನ್ನು ಭೇಟಿ ಮಾಡುತ್ತಿದ್ದಾರೆ. ಕಳೆದ ಬಾರಿ ಅವರ ಮೊದಲ ಭೇಟಿ ಸೌಜನ್ಯದ ಭೇಟಿಯಾಗಿತ್ತು. ಈ ಬಾರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಔಪಚಾರಿಕ ಪತ್ರ ಬರೆದು, ರಾಜ್ಯದಲ್ಲಿನ ಬರ ಪರಿಸ್ಥಿತಿಯನ್ನು ನಿಭಾಯಿಸಲು ಎನ್ಡಿಆರ್ಎಫ್ ಅಡಿಯಲ್ಲಿ ಹಣ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದು, ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು.
ಇನ್ನು ಇಂದಿನ ಭೇಟಿಯಲ್ಲಿ ಕರ್ನಾಟಕದಲ್ಲಿ ರೈತರ ಆತ್ಮಹತ್ಯೆ ಮತ್ತು ಎಂಎನ್ಆರ್ಇಜಿಎ ಅಡಿಯಲ್ಲಿ ಪ್ರತಿ ವರ್ಷ ತಲಾ 100 ರಿಂದ 150 ಮಾನವ ದಿನಗಳನ್ನು ಹೆಚ್ಚಿಸುವುದು ಸೇರಿದಂತೆ ವಿವಿಧ ವಿಷಯಗಳು ಚರ್ಚೆಗೆ ಬರುವ ಸಾಧ್ಯತೆಯಿದೆ.