ಬೆಂಗಳೂರು : ದಕ್ಷಿಣ ಕನ್ನಡ–ಉಡುಪಿ ಜಿಲ್ಲೆಗಳ ರಾಜಕೀಯ ವಲಯದಲ್ಲಿ ಇಂದು ಗಮನ ಸೆಳೆಯುವ ಬೆಳವಣಿಗೆಯೊಂದು ನಡೆದಿದೆ. ಕೆಲವು ಕಾಲ ಸಕ್ರಿಯ ರಾಜಕಾರಣದಿಂದ ದೂರವಾಗಿದ್ದ ಜನತಾದಳ ಪಕ್ಷದ ಹಳೆಯ ಮುಖಂಡರು ಇದೀಗ ಮತ್ತೆ ರಾಜಕೀಯ ರಂಗ ಪ್ರವೇಶಿಸಿದ್ದು, ಜಿಲ್ಲೆಯ ರಾಜಕೀಯ ಚಟುವಟಿಕೆಗಳಿಗೆ ಹೊಸ ಚೈತನ್ಯ ತುಂಬುವ ಲಕ್ಷಣಗಳು ಕಾಣಿಸುತ್ತಿವೆ.

ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಮುಖಂಡರಾಗಿ ಗುರುತಿಸಿಕೊಂಡಿದ್ದ ಶಶಿರಾಜ್ ಶೆಟ್ಟಿ ಕೊಳಂಬೆ ಹಾಗೂ ದಕ್ಷಿಣ ಕನ್ನಡ–ಉಡುಪಿ ಜಿಲ್ಲಾ ವಿದ್ಯಾರ್ಥಿ ಜನತಾದಳದ ಜಿಲ್ಲಾಧ್ಯಕ್ಷರಾಗಿಯೂ, ರಾಜ್ಯ ಸಮಿತಿ ಪದಾಧಿಕಾರಿಯಾಗಿಯೂ ಕಾರ್ಯನಿರ್ವಹಿಸಿದ್ದ ಯೋಗಿಶ್ ಶೆಟ್ಟಿ ಜಪ್ಪು ಅವರು ಅಧಿಕೃತವಾಗಿ ಜನತಾ ದಳ (Secular) ಪಕ್ಷಕ್ಕೆ ಮರು ಸೇರ್ಪಡೆಗೊಂಡಿದ್ದಾರೆ.

ಈ ಇಬ್ಬರು ನಾಯಕರು ಹಿಂದೆ ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿ ಸಂಘಟನೆಯ ಬಲವರ್ಧನೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಆದರೆ ಕೆಲ ಕಾರಣಗಳಿಂದ ಸಕ್ರಿಯ ರಾಜಕಾರಣದಿಂದ ಹಿಂದೆ ಸರಿದಿದ್ದರು. ಇದೀಗ ಪಕ್ಷದ ಸಿದ್ಧಾಂತ, ನಾಯಕತ್ವ ಹಾಗೂ ಕಾರ್ಯಪದ್ಧತಿಗಳ ಮೇಲೆ ಮತ್ತೊಮ್ಮೆ ನಂಬಿಕೆ ವ್ಯಕ್ತಪಡಿಸಿ ರಾಜಕೀಯ ಬದುಕಿನ ಹೊಸ ಅಧ್ಯಾಯಕ್ಕೆ ಚಾಲನೆ ನೀಡಿದ್ದಾರೆ.

ಇಂದು (05-03-2026) ಬೆಂಗಳೂರು ನಗರದಲ್ಲಿರುವ ಪಕ್ಷದ ರಾಜ್ಯ ಕಚೇರಿಯಲ್ಲಿ ನಡೆದ ಸರಳ ಆದರೆ ಅರ್ಥಪೂರ್ಣ ಕಾರ್ಯಕ್ರಮದಲ್ಲಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.‌ ಡಿ. ದೇವೆಗೌಡ ಅವರ ಆಶೀರ್ವಾದದೊಂದಿಗೆ ಇಬ್ಬರೂ ನಾಯಕರು ಅಧಿಕೃತವಾಗಿ ಪಕ್ಷಕ್ಕೆ ಮರು ಸೇರ್ಪಡೆಯಾದರು.

ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿಯವರು ಶಾಲು ಮತ್ತು ಹೂ ಮಾಲೆ ಹಾಕಿ ಸನ್ಮಾನಿಸಿದರು, ಯುವ ಘಟಕ ರಾಜ್ಯಾದ್ಯಕ್ಷ ನಿಖಿಲ್ ಕುಮಾರ್ ಸ್ವಾಮಿ , ರಾಜ್ಯ ವಕ್ತಾರ ಎಂ.ಬಿ. ಸದಾಶಿವ, ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಜಾಕೆ ಮಾದವ ಮಾಜಿ ಶಾಸಕ ಮೋಹಿದ್ದಿನ್ ಬಾವ, ವಸಂತ ಪೂಜಾರಿ, ಇಕ್ಬಲ್ ಮುಲ್ಕಿ, ರತ್ನಾಕರ್ ಸುವರ್ಣ, ಶಾ ಝಮೀರ್, ಮೀರಾ ಸಾಹೇಬ್, ದೇವಿಪ್ರಸಾದ ಕೊಕ್ಕಡ ಮಂಜುನಾಥ್ ಸುಳ್ಯ, ಪವನ್ ಯು ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ನಾಯಕರು, ಜನತಾದಳದ ಮೂಲ ತತ್ವಗಳಾದ ಸಾಮಾಜಿಕ ನ್ಯಾಯ, ರೈತರ ಪರ ಹೋರಾಟ ಹಾಗೂ ಪ್ರಾದೇಶಿಕ ಹಿತಾಸಕ್ತಿಗಳ ರಕ್ಷಣೆಯೇ ತಮ್ಮ ರಾಜಕೀಯ ಧ್ಯೇಯವಾಗಿದ್ದು, ಇದೇ ದಿಕ್ಕಿನಲ್ಲಿ ಮುಂದುವರೆಯುವ ಸಂಕಲ್ಪ ವ್ಯಕ್ತಪಡಿಸಿದರು.

ಶಶಿರಾಜ್ ಶೆಟ್ಟಿ ಕೊಳಂಬೆ ಅವರು ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಕ್ಷ ಸಂಘಟನೆಯನ್ನು ಮತ್ತಷ್ಟು ಚುರುಕುಗೊಳಿಸಿ ಗ್ರಾಮೀಣ ಮಟ್ಟದಿಂದಲೇ ಕಾರ್ಯಕರ್ತರನ್ನು ಸಂಘಟಿಸುವ ಕೆಲಸಕ್ಕೆ ಆದ್ಯತೆ ನೀಡುವುದಾಗಿ ಹೇಳಿದರು. ಯುವಕರನ್ನು ರಾಜಕೀಯ ಪ್ರಕ್ರಿಯೆಯಲ್ಲಿ ಭಾಗಿಯಾಗಿಸುವುದು ಹಾಗೂ ಜನಸಮಸ್ಯೆಗಳಿಗೆ ಸ್ಪಂದಿಸುವ ಶಕ್ತಿಯುತ ಸಂಘಟನೆ ನಿರ್ಮಿಸುವುದು ತಮ್ಮ ಗುರಿ ಎಂದು ಅವರು ತಿಳಿಸಿದರು.

ಯೋಗಿಶ್ ಶೆಟ್ಟಿ ಜಪ್ಪು ಅವರು ತಮ್ಮ ವಿದ್ಯಾರ್ಥಿ ರಾಜಕಾರಣದ ಅನುಭವವನ್ನು ಮುಂದಿನ ರಾಜಕೀಯ ಪಯಣದಲ್ಲಿ ಬಳಸಿಕೊಳ್ಳುವುದಾಗಿ ತಿಳಿಸಿದರು. ವಿದ್ಯಾರ್ಥಿಗಳು ಹಾಗೂ ಯುವಜನರ ಸಮಸ್ಯೆಗಳನ್ನು ಪ್ರಮುಖವಾಗಿ ಪ್ರಸ್ತಾಪಿಸಿ, ಶಿಕ್ಷಣ ಸಂಸ್ಥೆಗಳ ಮಟ್ಟದಲ್ಲೂ ಪಕ್ಷದ ಚಟುವಟಿಕೆಗಳನ್ನು ವಿಸ್ತರಿಸುವ ಉದ್ದೇಶವಿದೆ ಎಂದು ಹೇಳಿದರು.

ಇವರ ಮರುಪ್ರವೇಶದಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಜನತಾದಳ ಸಂಘಟನೆಗೆ ಹೊಸ ಚೈತನ್ಯ ಸಿಗಲಿದೆ ಎಂಬ ವಿಶ್ವಾಸ ಪಕ್ಷದ ಕಾರ್ಯಕರ್ತರಲ್ಲಿ ವ್ಯಕ್ತವಾಗಿದೆ. ಅನುಭವ ಹಾಗೂ ಯುವಶಕ್ತಿಯ ಸಮನ್ವಯದಿಂದ ಮುಂದಿನ ರಾಜಕೀಯ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಪಕ್ಷಕ್ಕೆ ಇದು ಬಲ ನೀಡಲಿದೆ ಎಂಬ ನಿರೀಕ್ಷೆಯೂ ವ್ಯಕ್ತವಾಗಿದೆ.