ಬೆಂಗಳೂರು: ಇಂದು ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್ ಕಾರ್ಯಕ್ರಮದ ಮೂಲಕ ಮಂಡ್ಯ ರೈಲು ನಿಲ್ದಾಣದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕು ಸ್ಥಾಪನೆ ಹಾಗೂ ಕೊಪ್ಪಳ ತಾಲೂಕಿನ ಮುನಿರಾಬಾದ್ ರೈಲ್ವೆ ನಿಲ್ದಾಣ ನವೀಕರಣ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ.
ದೇಶದ 554 ರೈಲ್ವೆ ನಿಲ್ದಾಣಗಳ ನವೀಕರಣ, ಅಭಿವೃದ್ಧಿ ಕಾಮಗಾರಿ ಹಾಗೂ 1500 ಮೇಲ್ಸೇತುವೆ ಕಾಮಗಾರಿಗೆ ಅವರು ಈ ಕಾರ್ಯಕ್ರಮದಲ್ಲಿ ಚಾಲನೆ ನೀಡಲಿದ್ದು, ಅವುಗಳಲ್ಲಿ ಮಂಡ್ಯ ಹಾಗೂ ಮುನಿರಾಬಾದ್ ಸೇರಿವೆ.
ಇಂದು ಬೆಳಿಗ್ಗೆ 10.45ಕ್ಕೆ ಕಾರ್ಯಕ್ರಮ ನಡೆಯಲಿದೆ. ಮಂಡ್ಯ ರೈಲ್ವೆ ನಿಲ್ದಾಣದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ, ಸಂಸದೆ ಸುಮಲತಾ ಅಂಬರೀಶ್, ಮಂಡ್ಯ ಶಾಸಕ ರವಿಕುಮಾರ್ ಗಣಿಗ ಭಾಗಿಯಾಗಲಿದ್ದಾರೆ.
ಅಮೃತ ಭಾರತ ನಿಲ್ದಾಣ ಯೋಜನೆಯಡಿ 372,13 ಕೋಟಿ ರೂ. ವೆಚ್ಚದಲ್ಲಿ 15 ರೈಲು ನಿಲ್ದಾಣಗಳಿಗೆ ಸ್ಮಾರ್ಟ್ ಟಚ್ ನೀಡಲಾಗುತ್ತದೆ.
ನೈಋತ್ಯ ರೈಲ್ವೆ ವ್ಯಾಪ್ತಿಯ ಕರ್ನಾಟಕದ ಕೆಂಗೇರಿ, ಕೃಷ್ಣರಾಜಪುರ, ಬಂಗಾರಪೇಟೆ, ಚನ್ನಪಟ್ಟಣ, ಧರ್ಮಪುರಿ, ದೊಡ್ಡಬಳ್ಳಾಪುರ, ಹಿಂದೂಪುರ, ಹೊಸೂರು, ಕುಪ್ಪಂ, ಮಲ್ಲೇಶ್ವರ, ಮಾಲೂರು, ಮಂಡ್ಯ, ರಾಮನಗರ, ತುಮಕೂರು, ವೈಟ್ ಫೀಲ್ಡ್ ರೈಲು ನಿಲ್ದಾಣಗಳು ಒಟ್ಟು 327.13 ರೂ. ಕೋಟಿ ವೆಚ್ಚದಲ್ಲಿ ಉನ್ನತೀಕರಣಗೊಳ್ಳಲಿವೆ.