ಬೆಂಗಳೂರು: ಕಾಂಗ್ರೆಸ್ ಸರ್ಕಾರವು ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ದಿನದಿಂದಲೂ ಬೆಲೆ ಏರಿಕೆಯ ಕೊಡುಗೆಯನ್ನು ವರ್ಷದುದ್ದಕ್ಕೂ ಜನರಿಗೆ ನೀಡಿದೆ ಎಂದು ರಾಜ್ಯದ ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಕಿಡಿಕಾರಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಜನರ ರಕ್ತ ಹೀರುವುದು, ಬೆಲೆ ಏರಿಕೆಯ ಬರೆ ಎಳೆಯುವುದೇ ಈ ಸರ್ಕಾರದ ಸಾಧನೆ ಎಂದು ಟೀಕಿಸಿದರು. ಬೆಲೆ ಏರಿಕೆ ಮತ್ತು ಹಣದುಬ್ಬರದ ಗ್ಯಾರಂಟಿಯನ್ನು ಕಾಂಗ್ರೆಸ್ ಸರ್ಕಾರ ನೀಡುತ್ತಿದೆ ಎಂದರು.

ರೈತರಿಗೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ನೀಡಬೇಕಾದ ಹಣ ನೀಡುತ್ತಿಲ್ಲ. ಬರ ನಿರ್ವಹಣೆಯಲ್ಲಿ ಸರ್ಕಾರ ತನ್ನ ಪಾಲಿನ ಹಣವನ್ನೂ ನೀಡಿಲ್ಲ. ರೈತರ ಮೇಲೆ ಬಿತ್ತನೆ ಬೀಜದ ದರದಿಂದ ಆರಂಭಿಸಿ ವಿದ್ಯುತ್ತಿನವರೆಗೆ, ನೀರಿನ ದರವನ್ನೂ ಹೆಚ್ಚಿಸಿಕೊಂಡು ಬರುತ್ತಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಅರ್ಧ ಲೀಟರ್ ಹಾಲಿಗೂ 2 ರೂ., ಒಂದು ಲೀಟರ್ ಹಾಲಿಗೂ 2 ರೂ. ದರ ಏರಿಸಿದೆ. ಇದು ಬಡವರಿಗೆ ದೊಡ್ಡ ಹೊಡೆತ ಕೊಟ್ಟಂತಾಗಿದೆ. ಈಗಾಗಲೇ ಸಂಕಷ್ಟದಲ್ಲಿರುವ ಜನರನ್ನು ಇನ್ನಷ್ಟು ಸಂಕಷ್ಟಕ್ಕೆ ಸಿಲುಕಿಸುವ ಕೆಲಸವನ್ನು ಬಹಳ ಪ್ರಾಮಾಣಿಕವಾಗಿ ಮಾಡುತ್ತಿದ್ದಾರೆ. ಭ್ರಷ್ಟ ಕಾಂಗ್ರೆಸ್ ಸರ್ಕಾರ ಜನವಿರೋಧಿ, ಇದು ಅಭಿವೃದ್ಧಿ ಶೂನ್ಯ ಸರ್ಕಾರ ಎಂದು ಕಿಡಿಕಾರಿದರು.

ಬಿಜೆಪಿ ಈ ಬೆಲೆ ಹೆಚ್ಚಳವನ್ನು ತೀವ್ರವಾಗಿ ಖಂಡಿಸುತ್ತದೆ. ಕೆಎಂಎಫ್, ಸರ್ಕಾರದ ಭ್ರಷ್ಟಾಚಾರವನ್ನು ನಿಯಂತ್ರಿಸಬೇಕು. ಜನರು ನಿಮಗೆ ಆಶೀರ್ವಾದ ಮಾಡಿದ್ದಾರೆ. ಜನರಿಗೆ ಕಿರುಕುಳ, ಹಿಂಸೆ ಕೊಡುವುದು ಸಲ್ಲದು ಎಂದು ಹೇಳಿದರು.