ಬೆಂಗಳೂರು: ರಾಜ್ಯದ ಹಲವೆಡೆ ಇಂದು ಮಳೆಯಾಗುವ ಸಾಧ್ಯತೆ ಇದೆ. ಸಿಲಿಕಾನ್‌ ಸಿಟಿಯಲ್ಲಿ ನಿನ್ನೆ ಮಳೆಯಾಗಿದ್ದು, ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ ಕೆಲ ದಿನಗಳು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಕರ್ನಾಟಕದಲ್ಲಿ ಬಿಸಿ ಮತ್ತು ಆರ್ದ್ರತೆ ಹೆಚ್ಚಾಗಲಿದೆ. ಏ.10-12ರ ವರೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ನಿರೀಕ್ಷೆಯಿದ್ದರೆ, ಉತ್ತರ ಒಳನಾಡಿನಲ್ಲಿ ಒಣ ಹವಾಮಾನ ಇರಲಿದೆ.

ಕರಾವಳಿ ಕರ್ನಾಟಕದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಹೆಚ್ಚಿರಲಿದೆ. ಸೆಖೆಯ ಅನುಭವ ಹೆಚ್ಚಾಗಿರಲಿದೆ. ಹೀಗಾಗಿ, ಏ.10 ರಿಂದ 12ರ ವರೆಗೆ ಈ ಭಾಗದಲ್ಲಿ ಐಎಂಡಿ ಯೆಲ್ಲೋ ಅಲರ್ಟ್​​ ಘೋಷಿಸಿದೆ. ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಮನವಿ ಮಾಡಿದೆ.

ದಕ್ಷಿಣ ಒಳನಾಡು ಭಾಗದ ಬೆಂಗಳೂರು, ಮೈಸೂರು, ಕೊಡಗು ಮತ್ತು ಚಾಮರಾಜನಗರದ ಕೆಲವು ಭಾಗಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ವೇಳೆಗೆ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಕಲಬುರಗಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಸಂಪೂರ್ಣ ಒಣ ಹವಾಮಾನದ ಜೊತೆಗೆ ತಾಪಮಾನದಲ್ಲಿ ಏರಿಕೆ ಕಂಡುಬರಲಿದೆ.