News Karnataka Kannada
Monday, May 06 2024
ರಾಮನಗರ

ಜೆಡಿಎಸ್‌ನಲ್ಲಿ ನಿಷ್ಠಾವಂತರ ಕಡೆಗಣನೆ: ಎಸ್.ಲಿಂಗೇಶ್‌ಕುಮಾರ್

Jds.
Photo Credit : News Kannada

ಚನ್ನಪಟ್ಟಣ: ತಾಲೂಕು ಜೆಡಿಎಸ್ ಮೂರು ಮಂದಿಯ ಹಿಡಿತಕ್ಕೆ ಸಿಲುಕಿ ನಲುಗಿದ್ದು, ಪಕ್ಷದಲ್ಲಿ ನಿಷ್ಠಾವಂತರು, ಹಳಬರಿಗೆ ಬೆಲೆ ಇಲ್ಲದಂತಾಗಿದೆ. ಇದರಿಂದ ಬೇಸತ್ತು ಪಕ್ಷ ತ್ಯಜಿಸಲು ನಿರ್ಧರಿಸಿದ್ದು, ಬಿಜೆಪಿ ಸೇರ್ಪಡೆಗೊಳ್ಳಲು ತೀರ್ಮಾನಿಸಿದ್ದೇನೆ ಎಂದು ಬಮೂಲ್ ಮಾಜಿ ನಿರ್ದೇಶಕ ಎಸ್.ಲಿಂಗೇಶ್‌ಕುಮಾರ್ ಘೋಷಿಸಿದರು.

ಖಾಸಗಿ ಹೋಟೆಲ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸೋಮವಾರ ಬೆಂಗಳೂರಿನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು, ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಮತ್ತಿತರ ನಾಯಕರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದೇನೆ. ನನ್ನ ಈ ನಿರ್ಧಾರದಿಂದ ಯಾವುದೇ ಕಾರಣಕ್ಕೂ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ತಾಲೂಕು ಜೆಡಿಎಸ್ ಅಧ್ಯಕ್ಷ ಎಚ್.ಸಿ.ಜಯಮುತ್ತು, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಗೋವಿಂದಹಳ್ಳಿ ನಾಗರಾಜು, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಕುಕ್ಕೂರುದೊಡ್ಡಿ ಜಯರಾಮು ಈ ಮೂರು ಮಂದಿ ಸೇರಿಕೊಂಡು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ದಿಕ್ಕು ತಪ್ಪಿಸಿದ್ದಾರೆ. ಈ ಮೂರು ಮಂದಿಯಿಂದಾಗಿ ಜೆಡಿಎಸ್‌ನಲ್ಲಿ ಪಕ್ಷಾಂತರ ಪರ್ವ ಆರಂಭಗೊಂಡಿದೆ ಎಂದು ನೇರ ಆರೋಪ ಮಾಡಿದರು.

ಈ ಮೂರು ಮಂದಿಯಿಂದಾಗಿ ಜೆಡಿಎಸ್‌ನಲ್ಲಿ ಗುಂಪುಗಾರಿಕೆ ಮಿತಿಮೀರಿದೆ. ಸಹಕಾರ ಕ್ಷೇತ್ರದ ಚುನಾವಣೆಯಲ್ಲಿ ಈ ಮೂರು ಮಂದಿಯಿಂದಾಗಿ ಸ್ವಪಕ್ಷಿಯರ ವಿರುದ್ಧವೇ ಸ್ಪರ್ಧಿಸುವಂಥ ವಾತಾವರಣ ನಿರ್ಮಾಣವಾಗಿದೆ. ಬೇರೆ ಪಕ್ಷದ ಅಭ್ಯರ್ಥಿಗಳ ವಿರುದ್ಧ ಚುನಾವಣೆಯಲ್ಲಿ ಸೆಣಸಬೇಕಾದವರು, ನಮ್ಮ ಪಕ್ಷದ ಅಭ್ಯರ್ಥಿಯ ವಿರುದ್ಧವೇ ಸ್ಪರ್ಧಿಸುವಂತಾಗಿದೆ ಎಂದು ವಿಷಾದಿಸಿದರು.

ಬಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ನನ್ನ ಸ್ಪರ್ಧೆಯನ್ನು ತಡೆಯಬೇಕೆಂಬ ಉದ್ದೇಶದಿಂದ ಸಿಂಗರಾಜಿಪುರ ವಿಎಸ್‌ಎಸ್‌ಎನ್ ನಿರ್ದೇಶಕರ ರಾಜೀನಾಮೆ ಕೊಡಿಸಿ ಅನಾವಶ್ಯಕ ಚುನಾವಣೆ ನಡೆಯುವಂತೆ ಮಾಡಿದರು. ಈ ಮೂರು ಮಂದಿಯ ಆಟಾಟೋಪಗಳನ್ನು ಕುಮಾರಸ್ವಾಮಿ ತಡೆಯಬಹುದಿತ್ತಾದರೂ ತಡೆಯುವ ಗೋಜಿಗೆ ಹೋಗಲಿಲ್ಲ. ಇದರಿಂದಾಗಿ ಪ್ರಾಮಾಣಿಕ ಕಾರ್ಯಕರ್ತರು ಬೇರೆ ಪಕ್ಷಗಳತ್ತ ಹೋಗುತ್ತಿದ್ದಾರೆ.  ಈಗ ಆರಂಭವಾಗಿರುವ ಪಕ್ಷಾಂತರ ಪರ್ವ ಮುಂದಿನ ದಿನಗಳಲ್ಲಿ ತಾರಕಕ್ಕೇರಲಿದ್ದು, ಸಾವಿರಾರು ಮಂದಿ ಜೆಡಿಎಸ್ ಕಾರ್ಯಕರ್ತರು ಜೆಡಿಎಸ್ ತೊರೆಯಲಿದ್ದಾರೆ ಎಂದು ಭವಿಷ್ಯ ನುಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು