ರಾಮನಗರ: ಜಿಲ್ಲೆಯೂ ಸೇರಿ ರಾಜ್ಯದ ಪಾಲಿನ ಜೀವನಾಡಿ ಆಗಲಿರುವ ಮೇಕೆದಾಟು ಅಣೆಕಟ್ಟೆ ಯೋಜನೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಸ್ಪಷ್ಟವಾಗಿ ಹೇಳಿದರು.
ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ 75ನೇ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಧ್ವಜಾರೋಹಣ ನೆರೆವೇರಿಸಿ ಅವರು ಮಾತನಾಡಿದರು.
ಕುಡಿಯುವ ನೀರಿನ ಉದ್ದೇಶಕ್ಕಾಗಿ ಅನುಷ್ಠಾನವಾಗುತ್ತಿರುವ ಈ ಯೋಜನೆ ನಿಲ್ಲುವುದಿಲ್ಲ. ಈಗಾಗಲೇ ಯೋಜನೆಯ ಸಮಗ್ರ ಯೋಜನಾ ವರದಿ (ಡಿಪಿಆರ್)ಯನ್ನು ಕೇಂದ್ರ ಜಲ ಆಯೋಗಕ್ಕೆ ಸಲ್ಲಿಸಲಾಗಿದೆ ಎಂದು ಅವರು ಹೇಳಿದರು.
ಆಯೋಗದಿಂದ ಒಪ್ಪಿಗೆ ಸಿಕ್ಕಿದ ಕೂಡಲೇ ಯೋಜನೆ ಕಾಮಗಾರಿ ಆರಂಭ ಮಾಡಲಾಗುವುದು. ಈ ಯೋಜನೆಯನ್ನು ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ. ಬೆಂಗಳೂರು ಮಹಾನಗರಕ್ಕೆ ಕುಡಿಯುವ ನೀರು ಪೂರೈಕೆಗೆ ಇದು ಅಗತ್ಯವಾದ ಯೋಜನೆ. ಈ ಯೋಜನೆಯನ್ನು ನೆರೆ ರಾಜ್ಯ ವಿರೋಧಿಸುವುದು ಸರಿಯಲ್ಲ. ಯಾರು ವಿರೋಧ ಮಾಡಿದರೂ ಯೋಜನೆ ನಿಲ್ಲುವುದೂ ಇಲ್ಲ’ ಎಂದು ಅವರು ಸ್ಪಷ್ಟಪಡಿಸಿದರು.