ರಾಮನಗರ: ರಾಷ್ಟ್ರೀಯ ಪಕ್ಷಗಳ ದುರಾಡಳಿತ ಹಾಗೂ ಜಾತಿ ರಾಜಕಾರಣದಿಂದ ಬೇಸತ್ತಿರುವ ರಾಜ್ಯದ ಜನತೆ ಮುಂದಿನ ದಿನಗಳಲ್ಲಿ ಜೆಡಿಎಸ್ ನ್ನು ಬೆಂಬಲಿಸಲಿದ್ದಾರೆ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.
ತಾಲೂಕಿನ ಕಸಬಾ ಹಾಗೂ ಕೈಲಾಂಚ ಹೋಬಳಿಯ ನಾನಾ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದ ಮತದಾರರು ಜೆಡಿಎಸ್ ಪರ ವಾಲಿದ್ದು, ಎಚ್.ಡಿ.ಕುಮಾರಸ್ವಾಮಿ ಅವರು 2022ರಲ್ಲಿ ಮತ್ತೊಮ್ಮೆ ರಾಜ್ಯದ ಚುಕ್ಕಾಣಿ ಹಿಡಿಯುವುದು ನಿಶ್ಚಿತ. ಇದಕ್ಕೆ ಇತ್ತೀಚೆಗೆ ಜೆಡಿಎಸ್ ಹಮ್ಮಿಕೊಂಡಿದ್ದ ಜನತಾ ಜಲಧಾರೆ ಗಂಗಾಯಾತ್ರೆ ಅಭೂತಪೂರ್ವ ಯಶಸ್ಸು ಗಳಿಸಿರುವುದೇ ಸಾಕ್ಷಿಯಾಗಿದೆ ಎಂದರು.
ಬಿಜೆಪಿ ಮತ್ತು ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಜಾತಿ-ಧರ್ಮಗಳ ನಡುವೆ ದ್ವೇಷದ ವಾತಾವರಣ ನಿರ್ಮಿಸಿ, ಮತ ಗಿಟ್ಟಿಸುವುದು ಈ ರಾಷ್ಟ್ರೀಯ ಪಕ್ಷಗಳ ತಂತ್ರವಾಗಿದೆ. ಸಾಮರಸ್ಯದಿಂದ ಜೀವನ ನಡೆಸುತ್ತಿದ್ದವರು ಇಂದು ಶತ್ರುಗಳಂತೆ ವರ್ತಿಸುವಂತೆ ಮಾಡಿದ್ದಾರೆ. ರಾಜ್ಯದಲ್ಲಿ ಜನರು ಶಾಂತಿ, ಸಹಬಾಳ್ವೆಯಿಂದ ಜೀವನ ನಡೆಸುವಂತಹ ವಾತಾವರಣ ಸೃಷ್ಟಿಯಾಗಬೇಕಾದರೆ ಕುಮಾರಸ್ವಾಮಿ ಅವರು ಮತ್ತೊಮ್ಮೆ ಈ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಹಿಡಿಯುವುದು ಅನಿವಾರ್ಯವಾಗಿದೆ. ಜನರೂ ಕೂಡ ರಾಷ್ಟ್ರೀಯ ಪಕ್ಷಗಳ ಕುತಂತ್ರಗಳನ್ನು ಅರಿತುಕೊಂಡಿದ್ದು ಜೆಡಿಎಸ್ ಬೆಂಬಲಿಸಲು ತೀರ್ಮಾನಿಸಿದ್ದಾರೆ ಎಂದು ಹೇಳಿದರು.
ಸ್ತ್ರೀ ಶಕ್ತಿ ಸಂಘಗಳು, ಅಂಗನವಾಡಿ, ಆಶಾ ಕಾರ್ಯರ್ತೆಯರ ಸಮಸ್ಯೆಗಳನ್ನು ನಿವಾರಿಸಿ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡುವ ಕೆಲಸವನ್ನು ಮುಂದಿನ ದಿನಗಳಲ್ಲಿ ಜೆಡಿಎಸ್ ಪಕ್ಷ ಮಾಡಲಿದೆ. ರಾಜ್ಯದ ನೆಲ, ಜಲ, ಗಡಿ ರಕ್ಷಣೆ ವಿಚಾರವಾಗಿ ರಾಜಿಯಾಗದೆ ಜನಪರ ಆಡಳಿತ ಜೆಡಿಎಸ್ ಪಕ್ಷದಿಂದ ಮಾತ್ರ ನೀಡಲು ಸಾಧ್ಯ ಎಂದು ಹೇಳಿದರು.
ಈ ವೇಳೆ ಜೆಡಿಎಸ್ ತಾಲೂಕು ಅಧ್ಯಕ್ಷ ರಾಜಶೇಖರ್, ಜಿಪಂ ಮಾಜಿ ಅಧ್ಯಕ್ಷ ಎಚ್.ಸಿ.ರಾಜು, ಮುಖಂಡರಾದ ರಾಮಕೃಷ್ಣ, ಜಯರಾಮು, ಬಿ.ಟಿ.ಕೃಷ್ಣ, ಮಹದೇವು, ಶಿವರಾಮ, ಹನುಮಂತು, ಜಯಕುಮಾರ್, ಹರೀಸಂದ್ರ ಗ್ರಾಪಂ ಅಧ್ಯಕ್ಷೆ ಆಶಾ ಮಂಚೇಗೌಡ ಮತ್ತಿತರರು ಹಾಜರಿದ್ದರು.