ರಾಮನಗರ: ಯಶಸ್ವಿನಿ ಯೋಜನೆಯನ್ನು ಪುನಃ ಆರಂಭಿಸಬೇಕು ಸಹಕಾರ ಸಂಘಗಳ ಮೂಲಕ ಆರೋಗ್ಯ ವಿಮಾ ಯೋಜನೆಗೆ ಚಾಲನೆ ನೀಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿ ಕರ್ನಾಟಕ ರೈತರ ಹಿತರಕ್ಷಣಾ ವೇದಿಕೆ ಕಾರ್ಯಕರ್ತರು ಸೋಮವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ನಗರದ ಜಿಲ್ಲಾ ಕಚೇರಿಗಳ ಸಂಕೀರ್ಣದ ಬಳಿ ಜಮಾಯಿಸಿದ ಕರ್ನಾಟಕ ರೈತರ ಹಿತರಕ್ಷಣಾ ವೇದಿಕೆಯ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕ ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದರು.
ಈ ವೇಳೆ ಸುದ್ದಿಗಾರರೊಂದಿಗೆ ವೇದಿಕೆ ರಾಜ್ಯಾಧ್ಯಕ್ಷ ಗುಡ್ಡಗೌಡ ಅವರು ಮಾತನಾಡಿ, ರಾಜ್ಯ ಸರ್ಕಾರ ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆ ಜಾರಿ ಮಾಡಿದ ನಂತರ ಯಶಸ್ವಿನಿ ವಿಮಾ ಯೋಜನೆಯನ್ನು ಸ್ಥಗಿತಗೊಳಿಸಿದೆ. ಆದರೆ ಆಯುಷ್ಮಾನ್ ಭಾರತ್ಗಿಂತ ಯಶಸ್ವಿನಿ ಯೋಜನೆಯಿಂದಲೇ ಹೆಚ್ಚು ಉಪಯೋಗವಾಗಿತ್ತು. ಯಶಸ್ವಿನಿ ಯೋಜನೆಯ ಮೂಲಕ ರೈತರು ಮತ್ತು ಅವರ ಕುಟುಂಬ ವರ್ಗ ನೇರವಾಗಿ ಖಾಸಗಿ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಸಾಧ್ಯವಾಗುತ್ತಿತ್ತು. ಆದರೆ ಆಯುಷ್ಮಾನ್ ಭಾರತ ಯೋಜನೆಯಡಿಯಲ್ಲಿ ಆ ಸೌಲಭ್ಯಗಳಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಚಿಕಿತ್ಸಾ ಸೌಲಭ್ಯ ಲಭ್ಯವಿಲ್ಲದಿದ್ದರೆ ಮಾತ್ರ ಖಾಸಗಿ ಸ್ಪೆಷಾಲಿಟಿ ಆಸ್ಪತ್ರೆಗಳಿಗೆ ಶಿಪಾರಸ್ಸು ಮಾಡುತ್ತಿದ್ದಾರೆ. ಮೇಲಾಗಿ ಹೆಚ್ಚಿನ ಸೌಲಭ್ಯ ಇರುವ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ಸಿಬ್ಬಂದಿ ಸ್ಪಂದಿಸುತ್ತಿಲ್ಲ. ಅಲ್ಲದೆ ತುರ್ತು ಸಂದರ್ಭಗಳಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಉತ್ತಮ ಸೇವೆ ಸಿಗುವುದು ಅನುಮಾನ. ಹೀಗಾಗಿ ನೇರವಾಗಿ ಖಾಸಗಿ ಆಸ್ಪತ್ರೆಗಳಲ್ಲೇ ಉನ್ನತ ಚಿಕಿತ್ಸಾ ಸೌಲಭ್ಯ ಪಡೆಯುವಂತಾಗಲು ಯಶಸ್ವಿನಿ ಯೋಜನೆಯನ್ನೇ ಪುನಃ ಜಾರಿ ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯಿಸುವುದಾಗಿ ತಿಳಿಸಿದರು.