ಚನ್ನಪಟ್ಟಣ : ಮಕ್ಕಳು ಶಿಕ್ಷಣದಿಂದ ವಿಮುಖರಾಗದಂತೆ ನೋಡಿಕೊಳ್ಳುವುದು ಪೋಷಕರು ಮತ್ತು ಶಿಕ್ಷಣ ಇಲಾಖೆಯ ಕರ್ತವ್ಯ ಎಂದು ಪರಿಸರ ಪ್ರೇಮಿ ಡಾ.ಮಲವೇಗೌಡ ತಿಳಿಸಿದರು.
ತಾಲ್ಲೂಕಿನ ಹರಿಸಂದ್ರ ಗ್ರಾಮದ ಬಳಿಯ ಕಟ್ಟಡ ನಿರ್ಮಾಣ ಕಾರ್ಮಿಕರ ಟೆಂಟ್ ಆವರಣದಲ್ಲಿ ರಾಂಪುರದ ನೇಗಿಲಯೋಗಿ ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಶನಿವಾರ ಏರ್ಪಡಿಸಿದ್ದ ವಾರದ ಕಲಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಎಲ್ಲಾ ಮಕ್ಕಳು ಉಚಿತ ಮತ್ತು ಕಡ್ಡಾಯ ಶಿಕ್ಷಣ ಪಡೆಯಲು ಪ್ರೇರೇಪಿಸಬೇಕು. ಇದು ಮಕ್ಕಳಲ್ಲಿ ಜೀವನ ಮೌಲ್ಯ ಅಳವಡಿಸಿಕೊಂಡು ಜವಾಬ್ದಾರಿಯುತ ನಾಗರಿಕರನ್ನಾಗಿಸುತ್ತದೆ. ಈ ನಿಟ್ಟಿನಲ್ಲಿ ಪೋಷಕರು, ಶಿಕ್ಷಣ ಇಲಾಖೆ ಕಾರ್ಯಪ್ರವೃತ್ತವಾಗಬೇಕು ಎಂದರು.
ಸಮಾಜ ಸೇವಕ ಡಾ.ಟಿ.ವಿ. ಶಂಕರ್ ವರದಪ್ಪ ಮಾತನಾಡಿ, ಬಡತನದ ಕಾರಣದಿಂದ ಮಕ್ಕಳ ಶೈಕ್ಷಣಿಕ ಹಕ್ಕುಗಳನ್ನು ಮೊಟಕುಗೊಳಿಸುವುದು ಬೇಡ. ಮಕ್ಕಳ ದೈಹಿಕ ಮತ್ತು ಮಾನಸಿಕ ಸಮತೋಲನದ ಕಡೆ ಗಮನ ಹರಿಸಬೇಕು ಎಂದು ಸಲಹೆ ನೀಡಿದರು. ಮಕ್ಕಳು ದೇಶದ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಸ್ಥಿತಿ ಬಗ್ಗೆ ತಿಳಿಯಲು ಮತ್ತು ಸಮಸಮಾಜ ನಿರ್ಮಾಣಕ್ಕೆ ಶಿಕ್ಷಣ ಮೂಲಭೂತವಾಗಿಬೇಕು. ಮಕ್ಕಳನ್ನು ತಪ್ಪದೇ ಶಾಲೆಗೆ ಕಳುಹಿಸುವ ಮೂಲಕ ಸದೃಢ ಮತ್ತು ಸ್ವಚ್ಛ ಭಾರತ ನಿರ್ಮಾಣಕ್ಕೆ ಕೈ ಜೋಡಿಸಬೇಕು ಎಂದರು.
ಟ್ರಸ್ಟ್ ಕಾರ್ಯದರ್ಶಿ ವಿಜಯ್ ರಾಂಪುರ ಮಾತನಾಡಿ, ಮಕ್ಕಳು ನಮ್ಮ ರಾಷ್ಟ್ರದ ಸಂಪತ್ತು. ವಲಸೆ ಕಾರ್ಮಿಕರು, ಅಲ್ಲಿನ ಸ್ಥಳೀಯ ಸರ್ಕಾರಿ ಶಾಲೆಗಳಿಗೆ ಮಕ್ಕಳ ಪ್ರವೇಶಾತಿ ಮಾಡಿಸಬೇಕು. ನಮ್ಮ ಟ್ರಸ್ಟ್ ವತಿಯಿಂದ ವಾರದ ಕಲಿಕೆ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಮಕ್ಕಳ ಕಲಿಕೆಯ ಜೊತೆಗೆ ಹಲವು ಚಟುವಟಿಕೆಗಳ ಮೂಲಕ ಶಿಕ್ಷಣದಲ್ಲಿ ಆಸಕ್ತಿಯನ್ನು ಬೆಳೆಸಿಕೊಳ್ಳಲು ಪ್ರಯತ್ನ ಮಾಡುತ್ತೇವೆ ಎಂದು ತಿಳಿಸಿದರು.
ಜಾನಪದ ಗಾಯಕ ಚೌ.ಪು. ಸ್ವಾಮಿ, ಮೊಗಳ್ಳಿ ರಾಜು ಸಾಕ್ಷರ ಗೀತೆಗಳನ್ನು ಹಾಡಿದರು. ಟ್ರಸ್ಟ್ ವತಿಯಿಂದ ಮಕ್ಕಳಿಗೆ ನೋಟ್ ಬುಕ್, ಪೆನ್ ಮತ್ತು ಮಾಸ್ಕ್ ವಿತರಿಸಲಾಯಿತು