ರಾಮನಗರ: ರಾಮನಗರ ಜಿಲ್ಲೆಯ ಗೊಲ್ಲರದೊಡ್ಡಿ ಗ್ರಾಮದ ಬಳಿ ಟ್ಯೂಷನ್ ಮುಗಿಸಿ ಮನೆಗೆ ಮರಳುತ್ತಿದ್ದ ಮಕ್ಕಳ ಮೇಲೆ ಸರಕು ಸಾಗಣೆ ಲಾರಿ ಹರಿದು ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿದೆ.
ಆಗಸ್ಟ್ 9 ರಂದು ಅಪಘಾತ ಸಂಭವಿಸಿದ್ದು, ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬ ವಿದ್ಯಾರ್ಥಿನಿ ಗಂಭೀರ ಗಾಯಗೊಂಡಿದ್ದರು. ಇದೀಗ ಗಂಭೀರ ಗಾಯಗೊಂಡಿದ್ದ ಏಳು ವರ್ಷದ ಜ್ಞಾನೇಶ್ವರಿ ಮೃತಪಟ್ಟಿದ್ದಾರೆ. ಜ್ಞಾನೇಶ್ವರಿ ರಾಜು-ಶಾಂತಕುಮಾರಿ ದಂಪತಿಯ ಪುತ್ರಿಯಾಗಿದ್ದು, ಬೆಂಗಳೂರಿನ ಇಂದಿರಾಗಾಂಧಿ ಇನ್ಸ್ಟಿಟ್ಯೂಟ್ ಆಫ್ ಚೆಸ್ಟ್ ಡಿಸೀಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಮೃತ ಮಕ್ಕಳ ಕುಟುಂಬಸ್ಥರಿಗೆ ಸೂಕ್ತ ಪರಿಹಾರ ಒದಗಿಸುವಂತೆ ಒತ್ತಾಯಿಸಿ ಮಕ್ಕಳ ಕುಟುಂಬಸ್ಥರು, ಸಂಬಂಧಿಕರು ಹಾಗೂ ಸ್ಥಳೀಯರು ಬಾಲಕಿಯ ಶವವನ್ನು ರಾಮನಗರ-ಮಾಗಡಿ ರಸ್ತೆಯಲ್ಲಿ ಇಟ್ಟು ಪ್ರತಿಭಟನೆ ನಡೆಸಿದರು. ಅಧಿಕಾರಿಗಳು ಸ್ಥಳಕ್ಕೆ ಬಂದು ಸೂಕ್ತ ಪರಿಹಾರ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಘಟನೆ ಕುರಿತು ತೀವ್ರ ಸಂತಾಪ ವ್ಯಕ್ತಪಡಿಸಿರುವ ಇಂತಹ ದುರಂತಗಳಿಗೆ ಕಾರಣವಾಗುವ ದುಡುಕಿನ ಮತ್ತು ನಿರ್ಲಕ್ಷ್ಯದ ಚಾಲನೆಯ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.