ರಾಮನಗರ: ರಾಮನಗರ ಜಿಲ್ಲೆಗೆ ಜೆಡಿಎಸ್ ಪಂಚರತ್ನ ರಥಯಾತ್ರೆಯು ಡಿ.15 ರಂದು ಪ್ರವೇಶ ಮಾಡುತ್ತಿದ್ದು, ರಥಯಾತ್ರೆಯನ್ನು ಯಶಸ್ವಿಯಾಗಿಸಲು ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿಕೊಂಡಿದ್ದಾರೆ.
ಬಿಡದಿಯ ಕೇತುಗಾನಹಳ್ಳಿಯಲ್ಲಿನ ತೋಟದ ಮನೆಯಲ್ಲಿ ಪಂಚರತ್ನ ರಥಯಾತ್ರೆ ಜಿಲ್ಲೆಗೆ ಆಗಮನದ ಹಿನ್ನೆಲೆಯಲ್ಲಿ ನಡೆದ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿ, ಪಂಚರತ್ನ ರಥಯಾತ್ರೆ ಈಗಾಗಲೇ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸಂಚರಿಸಿ ಈಗ ತುಮಕೂರು ಜಿಲ್ಲೆಗೆ ಆಗಮಿಸಿದೆ. ಡಿ.15ರಂದು ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿಗೆ ರಥಯಾತ್ರೆ ಆಗಮಿಸಲಿದ್ದು ಡಿ.16ರಂದು ರಾಮನಗರಕ್ಕೆ ಪ್ರವೇಶಿಸಲಿದೆ. ಡಿ.16ರಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬ ಇರುವುದರಿಂದ ರಾಮನಗರದಲ್ಲಿ ಶ್ರೀನಿವಾಸ ಕಲ್ಯಾಣ ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ರಾಜ್ಯದ ಜನರ ಒಳಿತಿಗಾಗಿ ಈ ಧಾರ್ಮಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಶ್ರೀನಿವಾಸ ಕಲ್ಯಾಣ ಕಾರ್ಯಕ್ರಮ ಎಲ್ಲರ ಕೈಯಲ್ಲಿ ಮಾಡಲು ಸಾಧ್ಯವಿಲ್ಲ. ಭಗವಂತನ ಕೃಪೆಯಿಂದ ನಮಗಿದು ಸಾಧ್ಯವಾಗಿದೆ. ರಾಮನಗರ ಮಾಜಿ ಸಿಎಂ ಕುಮಾರಸ್ವಾಮಿ ಅವರ ಕರ್ಮಭೂಮಿಯಾಗಿದ್ದು ಇಡೀ ಜಿಲ್ಲೆಯಲ್ಲಿ ಪಂಚರತ್ನ ರಥಯಾತ್ರೆ ಹಾಗೂ ವಿಶೇಷ ಧಾರ್ಮಿಕ ಕಾರ್ಯಕ್ರಮ ಐತಿಹಾಸಿಕ ಆಗುವುದರಲ್ಲಿ ಸಂಶಯವಿಲ್ಲ ಎಂದರು.
ಪಂಚರತ್ನ ರಥಯಾತ್ರೆ ಡಿ.16 ಮತ್ತು 17 ರಂದು ರಾಮನಗರ ತಾಲ್ಲೂಕಿನಲ್ಲಿ ಸಂಚರಿಸಿ ಡಿ.18 ಮತ್ತು 19 ರಂದು ಕನಕಪುರ ಹಾಗೂ ಡಿ.19 ಮತ್ತು 20 ರಂದು ಚನ್ನಪಟ್ಟಣದಲ್ಲಿ ಸಂಚಾರ ಮಾಡಲಿದೆ. ಜಿಲ್ಲೆಯಲ್ಲಿ ಐದು ದಿನಗಳ ಕಾಲ ಸಂಚರಿಸುವುದರಿಂದ ಆಯಾ ಭಾಗದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಅಗತ್ಯ ಪೂರ್ವ ಸಿದ್ಧತೆಗಳನ್ನು ಏರ್ಪಾಡು ಮಾಡಿಕೊಳ್ಳುವಂತೆ ಸೂಚನೆ ನೀಡಿದರು.