ರಾಮನಗರ: ಮಂಡ್ಯ ಕ್ಷೇತ್ರದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಸ್ಪರ್ಧೆ ಸಾಧ್ಯತೆ ವಿಚಾರವಾಗಿ ಜಿಲ್ಲೆಯ ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಯನ್ನು ಮುಖಂಡರು, ಕಾರ್ಯಕರ್ತರಿಂದ ಮುತ್ತಿಗೆ ಹಾಕಿದ್ದಾರೆ.
ಕುಮಾರಸ್ವಾಮಿ ಚನ್ನಪಟ್ಟಣ ಕ್ಷೇತ್ರ ಬಿಟ್ಟು ಹೋಗಬಾರದೆಂದು ಆಗ್ರಹಿಸಿದ್ದಾರೆ. ಜೊತೆಗೆ ಮಂಡ್ಯ ಕ್ಷೇತ್ರದಲ್ಲಿ ನೀವೇ ಸ್ಪರ್ಧಿಸಿ, ನಾವು ಬಂದು ಪ್ರಚಾರ ಮಾಡುತ್ತೇವೆ. ಆದರೆ ಮಂಡ್ಯ ಕ್ಷೇತ್ರದಿಂದ ಹೆಚ್ಡಿ ಕುಮಾರಸ್ವಾಮಿ ಸ್ಪರ್ಧೆ ಮಾಡಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.
ಚನ್ನಪಟ್ಟಣದ ರೆಸಾರ್ಟ್ನಲ್ಲಿ ನಡೆಯುತ್ತಿದ್ದ ಜೆಡಿಎಸ್ ಕಾರ್ಯಕರ್ತರ ಸಭೆಯ ಮಧ್ಯೆ ನಿಖಿಲ್ಗೆ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ.
ಸಭೆ ಬಳಿಕ ಮಾತನಾಡಿ ನಿಖಿಲ್ ಕುಮಾರಸ್ವಾಮಿ, ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಹಾಗಾಗಿ ಇಂದು ಕುಣಿಗಲ್ನಲ್ಲಿ ಸಭೆ ಮಾಡಿ ಈಗ ಚನ್ನಪಟ್ಟಣ ಕಾರ್ಯಕರ್ತರ ಸಭೆ ಮಾಡ್ತಿದ್ದೇನೆ. ಕಾರ್ಯಕರ್ತರನ್ನ ಸಜ್ಜುಗೊಳಿಸಿ ಮೈತ್ರಿ ಅಭ್ಯರ್ಥಿ ಗೆಲ್ಲಿಸುವಂತೆ ಮನವಿ ಮಾಡ್ತಿದ್ದೇವೆ. ಡಾ.ಮಂಜುನಾಥ್ ಸರಳ, ಸಜ್ಜನಿಕೆಯ ವ್ಯಕ್ತಿ. ಸುಮಾರು 8 ಲಕ್ಷ ಜನಕ್ಕೆ ಹೃದಯ ಆಪರೇಷನ್ ಮಾಡಿದ್ದಾರೆ. ಅವರ ಸೇವೆ ಬಗ್ಗೆ ಜನ ಮಾತನಾಡುತ್ತಿದ್ದಾರೆ. ಅವರು ಗೆಲುವು ನಿಶ್ಚಿತ ಎಂದಿದ್ದಾರೆ.
ಮಂಡ್ಯದಿಂದ ಹೆಚ್ಡಿ ಕುಮಾರಸ್ವಾಮಿ ಸ್ಪರ್ಧೆ ಎಂದು ಮಾಜಿ ಸಚಿವ ಪುಟ್ಟರಾಜು ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು ನಿನ್ನೆ ಸಿ.ಎಸ್.ಪುಟ್ಟರಾಜು ಹೇಳಿದ್ದನ್ನು ಗಮನಿಸಿದ್ದೇನೆ. ಅವರು ಮನಸ್ಸಿನ ಭಾವನೆಯನ್ನು ವ್ಯಕ್ತಪಡಿಸಿದ್ದಾರೆ. ಕುಮಾರಸ್ವಾಮಿ ಸ್ಪರ್ಧೆ ಬಗ್ಗೆ ಹೆಚ್ಡಿ ದೇವೇಗೌಡ ಮತ್ತು ಪಕ್ಷದ ನಾಯಕರು ತೀರ್ಮಾನಿಸಿಲ್ಲ. ಎಲ್ಲರ ಜೊತೆಗೂ ಚರ್ಚೆ ಮಾಡಿ ಅಂತಿಮ ತೀರ್ಮಾನ ಮಾಡುತ್ತೇವೆ ಎಂದು ಹೇಳಿದ್ದಾರೆ.