ರಾಮನಗರ: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿನ ಸರ್ವಿಸ್ ರಸ್ತೆಗಳ ಕಾಮಗಾರಿ ಪೂರ್ಣಗೊಳಿಸಿ ಸುಸಜ್ಜಿತ ರಸ್ತೆ ಆಗುವವರೆಗೆ ಶುಲ್ಕ ಸಂಗ್ರಹ ಮಾಡದಂತೆ ಆಗ್ರಹಿಸಿ ಕರವೇ ಸ್ವಾಭಿಮಾನಿ ಸೇನೆ ಕಾರ್ಯಕರ್ತರು ಕಣಿಮಿಣಿಕೆ ಟೋಲ್ ಪ್ಲಾಜಾ ಬಳಿ ಶನಿವಾರ ಪ್ರತಿಭಟನೆ ನಡೆಸಿದರು.
ಬಿಡದಿ ಹೋಬಳಿ ಹೆಜ್ಜಾಲದ ಬಳಿಯಿರುವ ಕಣಿಮಿಣಕೆ ಪ್ಲಾಜಾ ಬಳಿ ಕರವೇ ಸ್ವಾಭಿಮಾನಿ ಸೇನೆ ಸಂಘಟನೆ ರಾಜ್ಯಾಧ್ಯಕ್ಷ ನಿಂಗರಾಜಗೌಡ ಹಾಗೂ ರಾಜ್ಯ ಕಾರ್ಯದರ್ಶಿ ಹಾಗೂ ರಾಮನಗರ ಜಿಲ್ಲಾಧ್ಯಕ್ಷ ಸುಜ್ಞಾನಮೂರ್ತಿ ಅವರ ನೇತೃತ್ವದಲ್ಲಿ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಜಮಾಯಿಸಿ ಕೇಂದ್ರ ಮತ್ತು ರಾಜ್ಯ ಸರಕಾರ ಹಾಗೂ ಹೈವೆ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿದರು.
ಬೆಂಗಳೂರು-ಮೈಸೂರು ಮಹಾನಗರಗಳ ನಡುವೆ ಸುಗಮ ಸಂಚಾರಕ್ಕಾಗಿ ಹಾಗೂ ಟ್ರಾಫಿಕ್ ಸಮಸ್ಯೆ ನಿಯಂತ್ರಿಸುವ ಸಲುವಾಗಿ ದಶಪಥ ಹೆದ್ದಾರಿ ನಿರ್ಮಾಣ ಮಾಡಲಾಗಿದೆ. ಅದೇ ರೀತಿಯಲ್ಲಿ ಪ್ರಯಾಣಿಕರಿಗೆ ಮೂಲಭೂತ ಸೌಕರ್ಯವನ್ನು ಸಹ ಕಲ್ಪಿಸುವುದು ಸಹ ಪ್ರಾಧಿಕಾರದ ಕರ್ತವ್ಯವಾಗಿದೆ. ಆದರೆ ಎಕ್ಸ್ಪ್ರೆಸ್ ವೇ ವೈಜ್ಞಾನಿಕವಾಗಿಲ್ಲ. ಅಪಘಾತ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಸಾವು ನೋವುಗಳ ಸಂಖ್ಯೆ ಏರಿಕೆಯಾಗುತ್ತಿದೆ. ಸರ್ವಿಸ್ ರಸ್ತೆಯನ್ನು ಕಳಪೆ ಮಾಡಲಾಗಿದೆ, ಚರಂಡಿ ಕಾಮಗಾರಿಯನ್ನು ಪೂರ್ಣಗೊಳಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರು-ಮೈಸೂರು ರಾಷ್ಟ್ರೀಯ ದಶಪಥ ಹೆದ್ದಾರಿಯಲ್ಲಿರುವ ಸರ್ವಿಸ್ ರಸ್ತೆ ಗುಣಮಟ್ಟದಿಂದ ನಿರ್ಮಿಸದ ಕಾರಣ ಮೂರೇ ತಿಂಗಳಿಗೆ ಅಲ್ಲಲ್ಲಿ ಕಿತ್ತುಬಂದಿದೆ. ಸರ್ವಿಸ್ ರಸ್ತೆಯಲ್ಲಿ ಬಸ್ ತಂಗುದಾಣಗಳನ್ನು ಸ್ಥಾಪಿಸಿಲ್ಲ. ಪ್ರಯಾಣಿಕರಿಗೆ ಆಂಬುಲೆನ್ಸ್ ಹಾಗೂ ಪ್ರಥಮ ಚಿಕಿತ್ಸೆ ಸೇರಿದಂತೆ ಯಾವುದೇ ಸುರಕ್ಷತಾ ಕ್ರಮ ಕೈಗೊಂಡಿಲ್ಲ. ಹೆದ್ದಾರಿ ಪ್ರಯಾಣಿಕರಿಗೆ ಶೌಚಾಲಯ ವ್ಯವಸ್ಥೆ ಮಾಡಿಲ್ಲ. ಹೋಟೆಲ್ ಮತ್ತು ವಿಶ್ರಾಂತಿ ಗೃಹ ನಿರ್ಮಿಸಿಲ್ಲ. ಈ ಎಲ್ಲಾ ಮೂಲ ಸೌಕರ್ಯಗಳನ್ನು ಕಲ್ಪಿಸಿ ತದನಂತರ ಶುಲ್ಕ ನಿಗದಿ ಮಾಡಬೇಕು ಎಂದು ಒತ್ತಾಯಿಸಿದರು.
ಎಕ್ಸ್ಪ್ರೆಸ್ ಹೈವೆಗೆ ಭೂಮಿ ಕಳೆದುಕೊಂಡಿರುವ ರೈತರು, ಸ್ಥಳೀಯರು ಓಡಾಡಲು ಸರ್ವಿಸ್ ರಸ್ತೆಯನ್ನು ಗುಣಮಟ್ಟದಿಂದ ಪೂರ್ಣಗೊಳಿಸಬೇಕು. ರೈತರು, ಮಾಧ್ಯಮದವರು ಮತ್ತು ಹೋರಾಟಗಾರರಿಗೆ ಎಲ್ಲಾ ಟೋಲ್ ಪ್ಲಾಜಾಗಳಲ್ಲಿ ಉಚಿತ ಪ್ರವೇಶಕ್ಕೆ ಅನುಮತಿ ಕೊಡಬೇಕು. ದುಬಾರಿ ಟೋಲ್ ಸಂಗ್ರಹವನ್ನು ಕೈಬಿಡಬೇಕು. ಸರಕಾರ ಈ ವಿಚಾರದಲ್ಲಿ ಮಧ್ಯೆ ಪ್ರವೇಶಿಸಿ ತಕ್ಷಣವೇ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಬೇಕು. ತಪ್ಪಿದರೆ ಮುಂದಿನ ದಿನಗಳಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.