ರಾಮನಗರ: ಹುಟ್ಟು ಹಬ್ಬ ಆಚರಣೆ ಹಾಗೂ ಜೈಲಿನೊಳಗೆ ಅಕ್ರಮವಾಗಿ ಮೊಬೈಲ್ ಫೋನ್ ಬಳಕೆ ಮಾಡಿದ ಆರೋಪದ ಮೇಲೆ ಐವರು ಖೈದಿಗಳ ವಿರುದ್ಧ ರಾಮನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಪೊಲೀಸರ ಪ್ರಕಾರ, ಜನವರಿ 14 ರಂದು ರೌಡಿ ಶೀಟರ್ ಕಿರಣ್ ಅಲಿಯಾಸ್ ತಮಟೆ ಹುಟ್ಟುಹಬ್ಬವನ್ನು ರಾಮನಗರ ಜಿಲ್ಲಾ ಕಾರಾಗೃಹದಲ್ಲಿ ಆಚರಿಸಲಾಯಿತು.
ಆರೋಪಿಗಳು ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.
ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಬಾಬು ಅವರು ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಪಾಸಣೆ ವೇಳೆ ಜೈಲಿನಿಂದ ಎರಡು ಮೊಬೈಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ಸಂಬಂಧ ಜೈಲು ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ಎಸ್ಪಿ ಎಡಿಜಿಪಿ (ಕಾರಾಗೃಹ) ಅವರಿಗೆ ವರದಿ ನೀಡಿದ್ದರು. ಈ ಘಟನೆಯು ಸಾರ್ವಜನಿಕರಲ್ಲಿ ಆಕ್ರೋಶವನ್ನು ಸೃಷ್ಟಿಸಿತ್ತು.