ರಾಮನಗರ: 2023ರ ವಿಧಾನಸಭೆ ಚುನಾವಣೆಯಲ್ಲಿ ಅಮ್ ಆದ್ಮಿ ಪಾರ್ಟಿಗೆ ನೀಡಿದ್ದ ಬೆಂಬಲವನ್ನು ಕರ್ನಾಟಕ ಜನಸೈನ್ಯ ಸಂಘಟನೆ ವಾಪಸ್ ಪಡೆದುಕೊಂಡಿದೆ ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಬಿ.ಸಿ.ಶಿವಲಿಂಗಯ್ಯ ತಿಳಿಸಿದ್ದಾರೆ.
ತಾಲೂಕಿನ ಬಿಡದಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಕರ್ನಾಟಕ ಜನಸೈನ್ಯ ಸಂಘಟನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಡಾ.ಕೆ.ಎರ್ರಿಸ್ವಾಮಿ ಅವರಿಗೆ ಬಳ್ಳಾರಿ ಕ್ಷೇತ್ರದಿಂದ ಟಿಕೆಟ್ ನೀಡುವ ಒಪ್ಪಂದದ ಮೇರೆಗೆ 2023ರ ವಿಧಾನಸಭೆ ಚುನಾವಣೆಯಲ್ಲಿ ಅಮ್ ಆದ್ಮಿ ಪಾರ್ಟಿಯ ಅಭ್ಯರ್ಥಿಗಳನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಬೆಂಬಲಿಸಲು ಡಿಸೆಂಬರ್ 15 ರಂದು ನಡೆದ ಸಭೆಯಲ್ಲಿ ತೀರ್ಮಾನವಾಗಿತ್ತು. ಆದರೆ ಸಂಘಟನೆಯ ರಾಜ್ಯಾಧ್ಯಕ್ಷರಾದ ಡಾ.ಕೆ.ಎರ್ರಿಸ್ವಾಮಿ ಅವರಿಗೆ ಕೊಟ್ಟ ಮಾತಿನಂತೆ ಟಿಕೆಟ್ ನೀಡದೆ ವಂಚಿಸಿರುವ ಕಾರಣ ರಾಜ್ಯಾಧ್ಯಂತ ನೀಡಿದ್ದ ಬೆಂಬಲವನ್ನು ಹಿಂಪಡೆಯಲಾಗಿದೆ ಎಂದರು.
ಭ್ರಷ್ಠಾಚಾರದ ವಿರುದ್ಧ ದೇಶಾದ್ಯಂತ ಹೋರಾಟ ನಡೆಸುತ್ತಿದ್ದ ಕಾರಣಕ್ಕೆ ಕರ್ನಾಟಕ ಜನಸೈನ್ಯ ಸಂಘಟನೆಯು 2023ರ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಾರ್ಟಿಗೆ ರಾಜ್ಯದಲ್ಲಿ ಬೆಂಬಲ ಸೂಚಿಸಲು ನಿರ್ಧರಿಸಿತ್ತು. ಈ ಹಿನ್ನೆಲೆಯಲ್ಲಿ ಡಾ.ಕೆ.ಎರ್ರಿಸ್ವಾಮಿ ಅವರು ಪಕ್ಷದ ಸದೃಢ ಸಂಘಟನೆಗೆ ಶ್ರಮಿಸಿದ್ದರು. ಆದರೆ ಅಮ್ ಆದ್ಮಿ ಪಾರ್ಟಿಯ ರಾಜ್ಯಾಧ್ಯಕ್ಷ ಪೃಥ್ವಿರೆಡ್ಡಿ ಅವರು ಟಿಕೆಟ್ ನೀಡದೆ ವಂಚಿಸಿದ್ದಾರೆ. ಪಕ್ಷ ಕಟ್ಟಿದವರನ್ನು ಬಿಟ್ಟು ಬೇರೆ ಯಾರಿಗೋ ಬಿ ಫಾರಂ ನೀಡಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹೀಗಾಗಿ ಎಲ್ಲಾ ಜಿಲ್ಲೆಗಳಲ್ಲಿ ಬೆಂಬಲ ಹಿಂಪಡೆಯಲು ರಾಜ್ಯಾಧ್ಯಕ್ಷರು ಸೂಚನೆ ನೀಡಿದ್ದಾರೆ. ಈ ಬಾರಿ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಯಲ್ಲಿ ಯಾವ ಪಕ್ಷವನ್ನು ಬೆಂಬಲಿಸಬೇಕು ಎಂಬುದನ್ನು ಶೀಘ್ರವೇ ರಾಜ್ಯಮಟ್ಟದ ಸಭೆಯಲ್ಲಿ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಶಿವಲಿಂಗಯ್ಯ ತಿಳಿಸಿದರು.