ರಾಮನಗರ: ಜಿಲ್ಲೆಯಲ್ಲಿ ಬೇರೆ ಯಾವ ಪಕ್ಷಗಳ ಸರ್ಕಾರವೂ ಮಾಡದಷ್ಟು ಅಭಿವೃದ್ಧಿ ಕೆಲಸಗಳನ್ನು ಬಿಜೆಪಿ ಸರ್ಕಾರ ಮಾಡಿದೆ. ಇದನ್ನು ಗಮನಿಸಿ ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಮತ ನೀಡುವಂತೆ ವಿಧಾನ ಪರಿಷತ್ ಸದಸ್ಯರೂ ಆದ ಚನ್ನಪಟ್ಟಣದ ಬಿಜೆಪಿ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಮನವಿ ಮಾಡಿದರು.
ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಸರ್ಕಾರಗಳಿಗಿಂತ ಹೆಚ್ಚಾಗಿ ಬಿಜೆಪಿ ಸರ್ಕಾರ ರಾಮನಗರ ಜಿಲ್ಲೆಯಲ್ಲಿ ಅಭಿವೃದ್ಧಿ ಕೆಲಸ ಮಾಡಿದೆ. ಅಲ್ಲದೆ, ಎರಡೂ ಪಕ್ಷಗಳಿಗೆ ಪರ್ಯಾಯ ಶಕ್ತಿಯಾಗಿ ಬಿಜೆಪಿ ಬೆಳೆದಿದೆ. ಜಿಲ್ಲೆಯ ಜನರು ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಿಗೆ ಮತ ಚಲಾಯಿಸುತ್ತಾ ಬಂದಿದ್ದರು. ಆದರೀಗ ನಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ನೋಡಿರುವ ಜನರಿಗೆ ಬಿಜೆಪಿಗೂ ಮತ ಹಾಕುವ ಪ್ರೇರೇಪಣೆ ಸಿಕ್ಕಂತಾಗಿದೆ ಎಂದರು.
ಕಳೆದ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ರಾಜೀವ್ ಗಾಂಧಿ ಆರೋಗ್ಯ ವಿವಿ, ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಾಣಕ್ಕೆ ಚಾಲನೆ ನೀಡಿದ್ದೇವೆ. ಹೈಟೆಕ್ ಜಿಲ್ಲಾಸ್ಪತ್ರೆ ಲೋಕಾರ್ಪಣೆ ಮಾಡಲಾಗಿದೆ. ಮನೆಮನೆಗೆ ಕುಡಿಯುವ ನೀರಿನ ಯೋಜನೆ ಅನುಷ್ಠಾನ ಮಾಡುತ್ತಿದ್ದೇವೆ. ಮಾವು ಸಂಸ್ಕರಣಾ ಘಟಕ, ಹೈನುಗಾರಿಕೆ ರೇಷ್ಮೆ ಗೆ ಹೆಚ್ಚಿನ ಪ್ರೋತ್ಸಾಹ ನೀಡಿದೆ. ನೀರಾವರಿ ಯೋಜನೆಗಳಾದ ಮಂಚನಬೆಲೆ, ವೈ.ಜಿ.ಗುಡ್ಡ ಮೂಲಕ ಕೆರೆ ತುಂಬಿಸುವ ಕೆಲಸವನ್ನು ಬಿಜೆಪಿ ಸರ್ಕಾರ ಮಾಡಿದೆ ಎಂದರು.
ಜೆಡಿಎಸ್ ಮತ್ತು ಕಾಂಗ್ರೆಸ್ ಶಾಸಕರು ಆಡಳಿತದಲ್ಲಿ ಸಂಪೂರ್ಣವಾಗಿ ವೈಫಲ್ಯ ಹೊಂದಿರುವುದು ಮತದಾರರ ಅರಿವಿಗೆ ಬಂದಿದೆ. ನಮ್ಮಲ್ಲಿ ಯಾವುದೇ ರೀತಿಯ ಭಿನ್ನಮತ ಇಲ್ಲ. ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಶ್ರಮಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಗೆಲ್ಲಬೇಕೆಂದು ಪ್ರಯತ್ನ ನಡೆಯುತ್ತಿದ್ದು, ಪ್ರಧಾನಿ ಮೋದಿರವರು ಏ.೩೦ರಂದು ಚನ್ನಪಟ್ಟಣಕ್ಕೆ ಪ್ರಚಾರಕ್ಕೆ ಆಗಮಿಸುತ್ತಿದ್ದಾರೆ. ಇದರಿಂದ ಪಕ್ಷಕ್ಕೆ ಮತ್ತಷ್ಟು ಶಕ್ತಿ ಬರಲಿದೆ ಎಂದು ಯೋಗೇಶ್ವರ್ ಹೇಳಿದರು.
ಕೆ.ಆರ್.ಐ.ಡಿ.ಎಲ್ ಅಧ್ಯಕ್ಷ ಎಂ.ರುದ್ರೇಶ್ ಮಾತನಾಡಿ, ಕನಕಪುರ ಸೇರಿ ನಾಲ್ಕು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವಿದೆ. ಪಕ್ಷದ ಮುಖಂಡರು, ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡುತ್ತೇವೆ. ರಾಮನಗರ ಕ್ಷೇತ್ರದಲ್ಲಿ ಮುಖಂಡರು ಮತ್ತು ಕಾರ್ಯಕರ್ತರು ನಡುವೆ ಕೆಲವು ಗೊಂದಲಗಳಿದ್ದವು. ಅದೆಲ್ಲವೂ ಬಗೆಹರಿದಿದೆ. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುವುದಾಗಿ, ಇಲ್ಲಿ ಯಾವ ಒಳ ಒಪ್ಪಂದವೂ ನಡೆದಿಲ್ಲ. ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲು ಪ್ರತಿಷ್ಠೆಯಿಂದ ಕೆಲಸ ಮಾಡುತ್ತೇವೆ ಎಂದರು.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪರವರು ಬಿಜೆಪಿಯ ಸ್ಟಾರ್ ಪ್ರಚಾರಕರಾಗಿದ್ದು, ರಾಜ್ಯದ ೨೨೪ ಕ್ಷೇತ್ರಗಳಲ್ಲಿ ಪ್ರವಾಸ ನಡೆಸುತ್ತಿದ್ದಾರೆ. ಅದರಂತೆ ರಾಮನಗರ ಜಿಲ್ಲೆಯಲ್ಲಿಯೂ ಪ್ರಚಾರ ನಡೆಸಲಿದ್ದಾರೆ ಎಂದು ರುದ್ರೇಶ್ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
ಸುದ್ದಿಗೋಷ್ಟಿಯಲ್ಲಿ ರಾಮನಗರ ಕ್ಷೇತ್ರದ ಅಭ್ಯರ್ಥಿ ಗೌತಮ್ ಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಹುಲುವಾಡಿ ದೇವರಾಜು, ಮುಖಂಡರಾದ ಮುರಳೀಧರ್, ವರದರಾಜುಗೌಡ, ವಿಜಯಕುಮಾರ್, ಪುಣ್ಯಾವತಿ, ಎಸ್.ಆರ್.ನಾಗರಾಜ್, ಜಯಣ್ಣ, ಕೇಶವಮೂರ್ತಿ, ರುದ್ರದೇವರು, ಚಂದ್ರಶೇಖರ್ರೆಡ್ಡಿ ಮತ್ತಿತರರು ಇದ್ದರು.