ರಾಮನಗರ: ಗ್ರಾಮೀಣ ಭಾಗದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ವರದಾನವಾಗಿದೆ. ಜನರ ಸಮಸ್ಯೆಗಳ ಸ್ಪಂದನೆಗೆ ಸರ್ಕಾರ, ಜಿಲ್ಲಾಡಳಿತ ಆದ್ಯತೆ ನೀಡುತ್ತಿವೆ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಅವರು ತಿಳಿಸಿದರು.
ತಾಲ್ಲೂಕಿನ ಕೈಲಾಂಚ ಹೋಬಳಿಯ ಅವ್ವೇರಹಳ್ಳಿ (ಎಸ್.ಆರ್.ಎಸ್ ಬೆಟ್ಟ) ಗ್ರಾಮದಲ್ಲಿ ಆಯೋಜಿಸಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರದ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಮಹತ್ವಾಕಾಂಕ್ಷಿ ಕಾರ್ಯಕ್ರಮವಾಗಿ ಪ್ರತಿ ತಿಂಗಳು ಮೂರನೇ ಶನಿವಾರದಂದು ಕಾರ್ಯಕ್ರಮ ಹಮ್ಮಿಕೊಂಡು ಬರಲಾಗುತ್ತಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ಇಲಾಖೆಗಳ ನಡುವೆ ಸಮನ್ವಯ ಸಾಧಿಸಿ ಸ್ಥಳದಲ್ಲಿಯೇ ಪರಿಹರಿಸಲು ಈ ಕಾರ್ಯಕ್ರಮ ಸಹಕಾರಿಯಾಗಿದೆ ಎಂದರು.
ರಾಮನಗರ ತಾಲ್ಲೂಕು ತಹಶೀಲ್ದಾರ್ ಎಂ.ವಿಜಯ್ಕುಮಾರ್ ಅವರು ಮಾತನಾಡಿ ಸಾರ್ವಜನಿಕರು ಆಡಳಿತಾತ್ಮಕ ಕಾರಣದಿಂದ ತಾಲೂಕು, ಜಿಲ್ಲಾ ಹಂತದಲ್ಲಿ ವಿಳಂಬವಾಗಿರುವ ಸಮಸ್ಯೆಗಳನ್ನು ಈ ಕಾರ್ಯಕ್ರಮದ ಮೂಲಕ ಪರಿಹರಿಸಿಕೊಳ್ಳಬಹುದು.
ಕಂದಾಯ ಇಲಾಖೆ ವ್ಯಾಪ್ತಿಗೆ ಒಳಪಡುವ ಪಹಣಿ ತಿದ್ದುಪಡಿ, ಸಾಮಾಜಿಕ ಭದ್ರತೆ ಯೋಜನೆ ಪಿಂಚಣಿಗಳ ಮಂಜೂರಾತಿ ಪತ್ರ ವಿತರಣೆ, ಆಹಾರ ಪಡಿತರ ಚೀಟಿ ವಿತರಣೆ, ಚುನಾವಣಾ ಗುರುತಿನ ಚೀಟಿ ವಿತರಣೆ, ಆಶ್ರಯ ಮತ್ತು ಸ್ಮಶಾನಕ್ಕೆ ಜಮೀನು ಕಾಯ್ದಿರಿಸುವಿಕೆಗಾಗಿ ಪ್ರಸ್ತಾವನೆ ಪರಿಶೀಲನೆ ಮತ್ತು ಅಂಗೀಕಾರ ಹಾಗೂ ಪೌತಿ ಖಾತೆ ಪ್ರಕ್ರಿಯೆಗಳನ್ನು ಅಧಿಕಾರಿಗಳು ಇಡೀ ದಿನ ವಾಸ್ತವ್ಯ ಹೂಡಿ ವಿಲೇವಾರಿ ಮಾಡಲಿದ್ದಾರೆ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ವಿಶ್ವ ತಂಬಾಕು ನಿಯಂತ್ರಣ ಕಾರ್ಯಕ್ರಮ, ಮಲೇರಿಯಾ, ಡೆಂಗ್ಯೂ ತಡೆಗಟ್ಟಲು ತೆಗೆದುಕೊಳ್ಳಬಹುದಾದ ಕ್ರಮಗಳು, ಮೆದುಳು ಜ್ವರ, ಸೊಳ್ಳೆ ನಿಯಂತ್ರಣ, 2025ರ ವೇಳೆಗೆ ಕ್ಷಯರೋಗ ನಿರ್ಮೂಲನೆ ಮಾಡುವ ಗುರಿ, ಬಾಯಿ ಆರೋಗ್ಯ ಶಿಬಿರ, ರಾಷ್ಟ್ರೀಯ ಫ್ಲೋರೋಸಿಸ್ ನಿಯಂತ್ರಣ ಮತ್ತು ತಡೆಗಟ್ಟುವ ಕಾರ್ಯಕ್ರಮ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು ಹಾಗೂ ಸಾರ್ವಜನಿಕರಿಗೆ ಉಚಿತ ಆರೋಗ್ಯ ಶಿಬಿರವನ್ನು ಏರ್ಪಡಿಸಲಾಗಿತ್ತು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಚೇರಿ ವತಿಯಿಂದ ಮಕ್ಕಳಲ್ಲಿ ಪೋ?ಕಾಂಶ ಹೆಚ್ಚಿಸಲು ಸೇವಿಸುವ ಆಹಾರ ಪದಾರ್ಥಗಳನ್ನು ಅನಾವರಣಗೊಳಿಸಲಾಗಿತ್ತು. ಅಂಗನವಾಡಿಯಿಂದ ನೀಡಲಾಗುವ ಆಹಾರ ಧಾನ್ಯಗಳಿಂದ ಮಕ್ಕಳಿಗೆ ರುಚಿಕರ ತಿನಸುಗಳ ವಸ್ತು ಪ್ರದರ್ಶನ ಏರ್ಪಡಿಸಲಾಗಿತ್ತು.
ಕಾರ್ಯಕ್ರಮದಲ್ಲಿ, ತಾಪಂ ಕಾರ್ಯನಿರ್ವಾಹಕಾಧಿಕಾರಿ ಪ್ರದೀಪ್, ಎ.ಡಿ.ಎಲ್.ಆರ್. ಸಂತೋ?, ಹುಲಿಕರೆ ಗ್ರಾಪಂ ಅಧ್ಯಕ್ಷರು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.