ರಾಮನಗರ: ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಕುರಿತು ಜಿಲ್ಲೆಯ ನಿವಾಸಿಗಳ ಅಭಿಪ್ರಾಯ ಪಡೆಯಲು ಸಮೀಕ್ಷೆ ಆರಂಭಿಸಿರುವುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಬುಧವಾರ ಹೇಳಿದ್ದಾರೆ.
ಜಿಲ್ಲೆಗೆ ಮರುನಾಮಕರಣ ಮಾಡುವ ನಿರ್ಧಾರಕ್ಕೆ ತಾನು ಬದ್ಧವಾಗಿದ್ದೇನೆ. ನನ್ನ ವೈಯಕ್ತಿಕ ಸಾಮರ್ಥ್ಯದಲ್ಲಿ ಸಮೀಕ್ಷೆಯನ್ನು ಮಾಡುತ್ತಿದ್ದೇನೆ. ಈವರೆಗೆ ಸಮೀಕ್ಷೆಗೆ ಜನರಿಂದ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.
ಸಮೀಕ್ಷಾ ವರದಿ ಬಂದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಲಾಗುವುದು. ಸಚಿವ ಸಂಪುಟದ ಒಪ್ಪಿಗೆ ದೊರೆತ ನಂತರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲಾಗುವುದು ಎಂದು ಶಿವಕುಮಾರ್ ತಿಳಿಸಿದರು.
ರಾಮನಗರವು ಬೆಂಗಳೂರು ದಕ್ಷಿಣ ಜಿಲ್ಲೆಯ ಕೇಂದ್ರವಾಗಿ ಉಳಿಯುತ್ತದೆ. ಈಗಿರುವ ರಾಮನಗರ, ಚನ್ನಪಟ್ಟಣ, ಕನಕಪುರ ಮತ್ತು ಮಾಗಡಿ ತಾಲೂಕುಗಳು ಬೆಂಗಳೂರು ದಕ್ಷಿಣ ಜಿಲ್ಲೆಯ ಭಾಗವಾಗಿಯೇ ಮುಂದುವರಿಯಲಿವೆ. ಜಿಲ್ಲೆಗೆ ಹೊಸ ಪ್ರದೇಶಗಳನ್ನು ಸೇರಿಸುವ ಪ್ರಸ್ತಾವನೆ ಇಲ್ಲ ಎಂದರು.