ಬೆಂಗಳೂರು : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬದ ಸದಸ್ಯರ ವಿರುದ್ಧ ವಿಡಿಯೋ ಹರಿಬಿಟ್ಟಿದ್ದ ಯೂಟ್ಯೂಬರ್ ಸಮೀರ್ ಎಂ.ಡಿ. ವಿರುದ್ಧ ಕೋರ್ಟ್ ಆದೇಶ ನೀಡಿದ್ದು, ಸಮೀರ್ ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಹರಿಬಿಟ್ಟಿದ್ದ ವಿಡಿಯೋವನ್ನು ಪ್ರಧಾನ ಸಿಟಿ ಸಿವಿಲ್ ಕೋರ್ಟ್ ಆದೇಶದನ್ವಯ ಡಿಲೀಟ್ ಮಾಡಲಾಗಿದೆ.

ಈ ಹಿಂದೆ ಕರ್ನಾಟಕ ಹೈಕೋರ್ಟ್ನ ನ್ಯಾಯಮೂರ್ತಿ ಆರ್.ದೇವದಾಸ್ ಅವರಿದ್ದ ಏಕಸದಸ್ಯ ಪೀಠ ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿ, ಕುಟುಂಬ ಸದಸ್ಯರು ಹಾಗೂ ಧರ್ಮಸ್ಥಳಕ್ಕೆ ಸಂಬಂಧಿಸಿದ ಯಾವುದೇ ಸಂಸ್ಥೆಗಳ ಬಗ್ಗೆ ಮಾನಹಾನಿ ಹೇಳಿಕೆಗಳನ್ನು ನೀಡಬಾರದು ಎಂದು ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಅವರ ಹಿಂಬಾಲಕರಿಗೆ ಆದೇಶ ನೀಡಿತ್ತು.

ಯೂಟ್ಯೂಬರ್ ಸಮೀರ್ ವಿರುದ್ಧ ಪ್ರಧಾನ ಸಿಟಿ ಸಿವಿಲ್ ಕೋರ್ಟ್‌ನಲ್ಲಿ ಕಡ್ಡಾಯ ತಡೆಯಾಜ್ಞೆ ಇದ್ದು, ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿ, ಅವರ ಕುಟುಂಬ ಸದಸ್ಯರು ಮತ್ತು ಧರ್ಮಸ್ಥಳಕ್ಕೆ ಸಂಬಂಧಿಸಿದ ಯಾವುದೇ ಸಂಸ್ಥೆಗಳ ವಿರುದ್ಧ ಮಾನಹಾನಿ ಹೇಳಿಕೆಗಳು ಅಪಪ್ರಚಾರದ ವಿಡಿಯೋಗಳು ಮಾಡದಂತೆ ಕೋರ್ಟ್ ತಡೆಯಾಜ್ಞೆ ನೀಡಿತ್ತು.

ಜೊತೆಗೆ ಸಮೀರ್ ವೀಡಿಯೊಗಳನ್ನು ಇತರ ಯೂಟ್ಯೂಬ್ ಚಾನೆಲ್‌ಗಳೂ ಮಾಡಿಕೊಂಡಿದ್ದು, ಅವುಗಳನ್ನೂ ಡಿಲೀಟ್ ಮಾಡುವಂತೆ ಕೋರ್ಟ್ ಆದೇಶವನ್ನು ನೀಡಿದೆ. ಕೋರ್ಟ್ ಆದೇಶದ ನಂತರವೂ ಸಮೀರ್ ಎಂ.ಡಿ. ಮತ್ತೊಂದು ವಿಡಿಯೋವನ್ನು ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ.

ಜೊತೆಗೆ ಫೇಸ್ಬುಕ್, ಇನ್ಸ್ಟಾಗ್ರಾಮ್ ಸೇರಿದಂತೆ ಇತರ ಸಾಮಾಜಿಕ ಜಾಲತಾಣಗಳಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿಗಳು, ಅವರ ಕುಟುಂಬ ಸದಸ್ಯರು ಹಾಗೂ ಧರ್ಮಸ್ಥಳಕ್ಕೆ ಸಂಬಂಧಿಸಿದ ಸಂಸ್ಥೆಗಳ ವಿರುದ್ಧ ಅಪಪ್ರಚಾರ ಹಾಗೂ ಮಾನಹಾನಿ ಹೇಳಿಕೆಗಳಿರುವಂತಹ ಯಾವುದೇ ವರದಿ ಅಂಶಗಳನ್ನು ಅಪ್ಲೋಡ್ ಮಾಡದಂತೆ ಆದೇಶ ಮಾಡಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಪರ ವಕೀಲ ಎಸ್.ರಾಜಶೇಖರ್ ಹಿಲಿಯಾರು ವಾದ ಮಂಡಿಸಿದ್ದರು ಎಂಬ ಮಾಹಿತಿ ತಿಳಿದು ಬಂದಿದೆ.