ಬೆಂಗಳೂರು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯಲ್ಲಿ ರಾಜ್ಯ ರಾಜಧಾನಿ ಬೆಂಗಳೂರು ಅಭಿವೃದ್ಧಿ ಕುರಿತು ಚರ್ಚೆ ನಡೆಸಿದರು.
ಮಾತುಕತೆ ವೇಳೆ ಬೆಂಗಳೂರು ಅಭಿವೃದ್ಧಿ ಕುರಿತು ಯಾವ ರೀತಿಯ ಯೋಜನೆ ಜಾರಿಗೆ ತರಬಹುದು ಎನ್ನುವುದು ಸೇರಿದಂತೆ ನಗರದ ಅಭಿವೃದ್ಧಿಗೆ ಪೂರಕವಾಗಿ ಅಗತ್ಯ ಸಲಹೆಗಳನ್ನು ಡಿಕೆ.ಶಿವಕುಮಾರ್ ಅವರು ಪಡೆದುಕೊಂಡರು.
ಈ ಹಿಂದೆ ಸಿಎಂ ಆಗಿ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಬಸವರಾಜ ಬೊಮ್ಮಾಯಿ ಕೆಲಸ ನಿರ್ವಹಿಸಿದ್ದರು. ಈಗ ತಾವು ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿರುವ ಕಾರಣ ಬೊಮ್ಮಾಯಿ ಅವರಿಂದ ಬ್ರ್ಯಾಂಡ್ ಬೆಂಗಳೂರು ಸಂಬಂಧ ಸಮಾಲೋಚನೆ ನಡೆಸಿ ಸಲಹೆಗಳನ್ನು ಪಡೆದುಕೊಂಡಿದ್ದಾರೆ.
ಮಾತುಕತೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು 2 ವರ್ಷಗಳ ಕಾಲ ರಾಜ್ಯದ ಮುಖ್ಯಮಂತ್ರಿಗಳಾಗಿ, ಬೆಂಗಳೂರಿನ ಅಭಿವೃದ್ಧಿಗೆ ಕೆಲವು ಉತ್ತಮ ಯೋಜನೆ ಹಾಕಿಕೊಂಡಿದ್ದರು. ಆ ಯೋಜನೆಗಳು ಇನ್ನೂ ಜಾರಿಯಾಗಿಲ್ಲ. ಹೀಗಾಗಿ ಅವರನ್ನು ಭೇಟಿ ಮಾಡಿ ಅವರ ಸಲಹೆ, ಅಭಿಪ್ರಾಯ ಪಡೆದಿದ್ದೇನೆ ಎಂದು ಹೇಳಿದರು.