ಬೆಂಗಳೂರು: ಅಯೋಧ್ಯೆ ರಾಮ ಮಂದಿರದಲ್ಲಿ ಜನವರಿ 22 ರಂದು ನಡೆಯುವ ರಾಮಲಲ್ಲಾನ ವಿಗ್ರಹ ಪ್ರತಿಷ್ಠಾಪನಾ ಕಾರ್ಯಕ್ರಮದ ಅಂಗವಾಗಿ ರಾಜ್ಯದ ಮುಜರಾಯಿ ಇಲಾಖೆಯ ರಾಮ ಮಂದಿರ ಹಾಗೂ ಆಂಜನೇಯ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನಡೆಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಚಿಂತನೆ ನಡೆಸಿದೆ.
ಪ್ರಾಣ ಪ್ರತಿಷ್ಠಾಪನೆಯ ಸಂದರ್ಭದಲ್ಲಿ ವಿಶೇಷ ಪೂಜೆ, ರಾಮಜಪ ಮಾಡಲು ಸರ್ಕಾರವೇ ಚಿಂತನೆ ನಡೆಸಿದ್ದು, ಈ ಕುರಿತು ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆ ಇದೆ.
ಅಯೋಧ್ಯೆ ರಾಮಮಂದಿರ ಹೋರಾಟ ವಿಚಾರದಲ್ಲಿ ಕಾಂಗ್ರೆಸ್ ತುಷ್ಠೀಕರಣದ ರಾಜಕಾರಣ ಮಾಡಿಕೊಂಡೇ ಬಂದಿತ್ತು. ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಲ್ಲ ಎಂದು ಸಿದ್ದರಾಮಯ್ಯ ಅವರು ಬಹಿರಂಗವಾಗಿಯೇ ಹೇಳಿದ್ದರು. ಇದೀಗ ಇಂತಹ ಒಂದು ಪರಿವರ್ತನೆ ಅಚ್ಚರಿ ಮೂಡಿಸಿದೆ.
ಅಯೋಧ್ಯೆಯಲ್ಲಿ ರಾಮನ ವಿಗ್ರಹ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ಜನವರಿ 22 ರಂದು ನಡೆಯಲಿದ್ದು, ಹಲವು ಗಣ್ಯರಿಗೆ ಆಹ್ವಾನ ನೀಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಆಹ್ವಾನ ನೀಡಿಲ್ಲ ಎಂದು ಕೈ ನಾಯಕರು ತಗಾದೆ ಎತ್ತಿದ್ದಾರೆ. ಆಹ್ವಾನ ಬಂದಿಲ್ಲ, ಬಂದರೆ ಕಾರ್ಯಕ್ರಮಕ್ಕೆ ಹೋಗವ ಚಿಂತನೆ ನಡೆಸುತ್ತೇವೆ ಎಂದು ಕೆಲವರು ಹೇಳುತ್ತಿದ್ದಾರೆ.
ಸ್ಥಳಾವಕಾಶದ ಕೊರತೆ ಹಿನ್ನೆಲೆ ಜನಸಂಧಣಿ ತಡೆಯಲು ಕರ್ನಾಟಕದ ಮುಖ್ಯಮಂತ್ರಿ ಮಾತ್ರವಲ್ಲದೆ, ಯಾವುದೇ ರಾಜ್ಯದ ಮುಖ್ಯಮಂತ್ರಿಗಳಿಗೂ ರಾಮಲಲ್ಲಾನ ವಿಗ್ರಹ ಪ್ರತಿಷ್ಠಾಪನಾ ಕಾರ್ಯಕ್ರಮದ ಆಹ್ವಾನ ನೀಡಿಲ್ಲ. ಕೆಲವರಿಗಷ್ಟೇ ಆಹ್ವಾನ ನೀಡಲಾಗಿದೆ ಎಂದು ಬಿಜೆಪಿ ಹೇಳಿದೆ.