ತುಮಕೂರು:ಏಷ್ಯಾದ ಅತಿ ದೊಡ್ಡ ಸೋಲಾರ ಘಟಕಗಳಲ್ಲಿ ಒಂದಾದ ಪಾವಗಡದ ಸೋಲಾರ್ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿದೆ.
ಆಂಧ್ರ ಮೂಲದ ಸಿದ್ಧಾರ್ಥ ಸಂಸ್ಥೆ ಈ ಘಟಕದ ನಿರ್ವಹಣೆಯ ಜವಾಬ್ದಾರಿ ಹೊತ್ತಿದ್ದು, ಸಮರ್ಪಕ ನಿರ್ವಹಣೆಯ ಕೊರತೆಯಿಂದಾಗಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಬೇಸಿಗೆಯಿಂದ ಒಣಗಿ ನಿಂತಿದ್ದ ಹುಲ್ಲಿನಿಂದ ಬೆಂಕಿ ಹೊತ್ತಿಕೊಂಡು ಸುಮಾರು 70 ಎಕರೆಯಲ್ಲಿದ್ದ ಕೇಬಲ್ ವೈಯರ್, ಅಸೆಮ್ಲಿಬಾಕ್ಸ್ ಸೇರಿದಂತೆ ಮತ್ತಿತರ ಸಾಮಗ್ರಿಗಳು ಬೆಂಕಿಗಾಹುತಿಯಾಗಿವೆ.
ಸ್ಥಳೀಯರು ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದು, ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.
ಸ್ಥಳೀಯರು ಬೆಂಕಿ ನಂದಿಸದೇ ಹೋಗಿದ್ದರೆ ಇನ್ನೂ ಹೆಚ್ಚಿನ ಅನಾಹುತ ಸಂಭವಿಸುತ್ತಿತ್ತು ಎನ್ನಲಾಗಿದೆ. ಸುದ್ದಿ ತಿಳಿದ ಸೋಲಾರ್ ಘಟಕದ ಅಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.