ತುಮಕೂರು : ರಾಜ್ಯದಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದ ಹಾನಿಗೀಡಾದ ಬೆಳೆಗೆ ಹೆಚ್ಚಿನ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಕೇಂದ್ರ ತಂಡ ಬಂದು ಪರಿಶೀಲಿಸಿ ವರದಿ ಸಲ್ಲಿಸಿದ ನಂತರ ಮತ್ತಷ್ಟು ಪರಿಹಾರ ಸಿಗಬಹುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬೆಳೆ ನಷ್ಟಕ್ಕೆ ರೈತರು ಹೆಚ್ಚಿನ ಪರಿಹಾರ ಕೇಳುತ್ತಿದ್ದಾರೆ. ಪರಿಹಾರ ಮೊತ್ತವನ್ನು ಹೆಚ್ಚಿಸುವ ಸಂಬಂಧ ನಿರ್ಧಾರವನ್ನು ಕೇಂದ್ರ ಸರ್ಕಾರವೇ ತೆಗೆದುಕೊಳ್ಳಬೇಕಿದೆ ಎಂದೂ ಸ್ಪಷ್ಟಪಡಿಸಿದರು.
ಸಿದ್ಧಗಂಗಾ ಮಠದಲ್ಲಿ ಸೋಮವಾರ ಕಡೆ ಕಾರ್ತೀಕ ಸೋಮವಾರದಂದು ಲಕ್ಷ ಬಿಲ್ವಾರ್ಚಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಅಕಾಲಿಕ ಮಳೆಯಿಂದಾದ ಬೆಳೆ ಹಾನಿಗೆ ಪರಿಹಾರ ನೀಡಲಾಗುತ್ತಿದೆ. ಜಿಲ್ಲಾಧಿಕಾರಿಗಳ ಬಳಿ ₹685 ಕೋಟಿ ಹಣವಿದ್ದು, ಬಳಸಿಕೊಳ್ಳಲು ಸೂಚಿಸಲಾಗಿದೆ ಎಂದು ತಿಳಿಸಿದರು.
ಸಿದ್ಧಗಂಗಾ ಮಠದ ದಿ.ಶಿವಕುಮಾರ ಸ್ವಾಮೀಜಿ ಜನ್ಮದಿನವನ್ನು ದಾಸೋಹ ದಿನವನ್ನಾಗಿ ಆಚರಿಸಲು ಸರ್ಕಾರ ತೀರ್ಮಾನಿಸಿದೆ. ಕಾರ್ಯಕ್ರಮದ ರೂಪುರೇಷೆ ಯಾವ ರೀತಿ ಇರಬೇಕು ಎಂಬುದರ ಬಗ್ಗೆ ಸಿದ್ಧಲಿಂಗ ಸ್ವಾಮೀಜಿ ಜತೆ ಚರ್ಚಿಸಿ ಜಾರಿ ಮಾಡಲಾಗುವುದು ಎಂದರು.