ತುಮಕೂರು: ಸರ್ಕಾರಿ ಆಸ್ಪತ್ರೆಯಲ್ಲಿ ಒಂದುವರೆಯಿಂದ ಎರಡು ತಿಂಗಳ ಮಗುವಿಗೆ ನೀಡುವ ಚುಚ್ಚುಮದ್ದು ಪಡೆದ ತನ್ನ ಮಗು ಸಾವನ್ನಪ್ಪಿದೆ ಎಂದು ಆರೋಪಿಸಿ ಪೋಷಕರು ಆಸ್ಪತ್ರೆಗೆ ಮುತ್ತಿಗೆ ಹಾಕಿ ವೈದ್ಯರನ್ನು ಅಮಾನತು ಮಾಡುವಂತೆ ಒತ್ತಾಯಿಸಿದ ಘಟನೆ ಹುಳಿಯಾರು ಹೋಬಳಿಯ ಹೊಯ್ಸಳಕಟ್ಟೆ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುರುವಾರ ನಡೆದಿದೆ.
ಚಿಕ್ಕನಾಯಕನಹಳ್ಳಿ ತಾಲೂಕಿನ ಸೋಮನಹಳ್ಳಿ ಗ್ರಾಮದ ಮಧು ಮತ್ತು ಶೃತಿ ದಂಪತಿಯ ೨ ತಿಂಗಳ ಗಂಡು ಮಗು ಈ ಪ್ರಕರಣದಲ್ಲಿ ಸಾವನ್ನಪ್ಪಿದೆ. ಆಸ್ಪತ್ರೆಗೆ ಬರುವ ಮುನ್ನ ಆರೋಗ್ಯವಾಗಿದ್ದ ಮಗು ಚುಚ್ಚುಮದ್ದು ಪಡೆದ ನಂತರ ಆರೋಗ್ಯದಲ್ಲಿ ವ್ಯತ್ಯಾಸವಾಗಿ ಸಾವನ್ನಪ್ಪಿದೆ. ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಮೃತ ಮಗುವಿನ ತಂದೆ ಮಧು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವೈದ್ಯರ ನಿರ್ಲಕ್ಷ್ಯದಿಂದ ಹಸುಗೂಸು ಮೃತಪಟ್ಟಿದೆ ಎಂಬ ಸುದ್ದಿ ಕಾಡ್ಗಿಚ್ಚಿನಂತೆ ಹಬ್ಬಿ ಮೃತ ಮಗುವಿನ ಕುಟುಂಬಸ್ಥರು, ಗ್ರಾಮಸ್ಥರು, ಸಾರ್ವಜನಿಕರು ಆಸ್ಪತ್ರೆ ಮುಂದೆ ಜಮಾಯಿಸಿದ್ದರು . ವೈದ್ಯರು ಮತ್ತು ಸಿಬ್ಬಂದಿಯನ್ನು ಆಸ್ಪತ್ರೆಯಲ್ಲಿ ಕೂಡಿ ಹಾಕಿ ವೈದ್ಯರು ಹಾಗು ಸಿಬ್ಬಂದಿ ವರ್ಗದವರನ್ನು ಅಮಾನತು ಮಾಡಬೇಕೆಂದು ಪಟ್ಟು ಹಿಡಿದರು. ಈ ಸಂದರ್ಭದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಯಿತು.
ವೈದ್ಯರು ರೋಗಿಗಳಿಗೆ ಚಿಕಿತ್ಸೆ ನೀಡುವಾಗಲೇ ಪೋನ್ ಬಳಸುತ್ತಾರೆ. ಪ್ರತಿ ರೋಗಿಯ ಬಳಿ ಚಿಕಿತ್ಸೆ ನೀಡಲು ೨೦ ರಿಂದ ೧೦೦ ರೂ ವರೆಗೂ ಲಂಚ ಪಡೆಯುತ್ತಾರೆ, ಬೆಳಗ್ಗೆ ೧೧ ರಿಂದ ಮಧ್ಯಾಹ್ನ ೩ ಗಂಟೆವರೆಗೆ ಮಾತ್ರ ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ವೈದ್ಯರ ವಿರುದ್ದ ಧಿಕ್ಕಾರ ಕೂಗಿದರು. ಮೇಲಧಿಕಾರಿಗಳು ಸ್ಥಳಕ್ಕೆ ಆಗಮಿಸುವಂತೆ ಒತ್ತಾಯಿಸಿದರು.
ಘಟನೆಯ ಮಾಹಿತಿ ಪಡೆದ ಶಾಸಕ ಸಿ.ಬಿ.ಸುರೇಶ್ಬಾಬು ಅವರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಮಗು ಸಾವಿನ ಬಗ್ಗೆ ಪಾರದರ್ಶಕ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುವ ಭರವಸೆ ನೀಡಿ ಪರಿಸ್ಥಿತಿ ತಿಳಿಗೊಳಿಸಿ ಪ್ರತಿಭಟನೆ ಹಿಂಪಡೆಯುವಂತೆ ಮನವೊಲಿಸಿದರು.
ತಾಲೂಕು ಆರೋಗ್ಯಾಧಿಕಾರಿ ಡಾ.ಸಿ.ಆರ್.ಮೋಹನ್ ಸ್ಥಳಕ್ಕೆ ಭೇಟಿ ನೀಡಿ ಈಗಿರುವ ವೈದ್ಯ ಮಧು ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಬದಲಾಯಿಸಿ ವೈದ್ಯ ಸ್ವರೂಪ್ರನ್ನು ನಿಯೋಜಿಸಲಾಗಿದೆ. ನಾಳೆಯಿಂದಲೇ ಕರ್ತವ್ಯಕ್ಕೆ ಹಾಜರಾಗುತ್ತಾರೆ ಹಾಗು ಒಬ್ಬ ಆಶಾ ಕಾರ್ಯಕರ್ತರನ್ನು ಬದಲಾಯಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.