ತುಮಕೂರು: ಬಡವರ ಹಸಿವಿನ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದ್ದು ನಾವು ಅಕ್ಕಿ ಕೊಡಲೇಬೇಕು ಎಂದು ತೀರ್ಮಾನ ಮಾಡಿದ್ದೇವೆ. ಅದರಂತೆ ಅಕ್ಕಿ ಕೊಟ್ಟೇ ಕೊಡುತ್ತೇವೆ. ಅಕ್ಕಿ ಕೊಡುವ ವಿಚಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ನಾವು ದುಡ್ಡು ಕೊಟ್ಟರೂ ಕೇಂದ್ರ ಸರ್ಕಾರ ಅಕ್ಕಿ ಕೊಡುತ್ತಿಲ್ಲ. ಗೋದಾಮಿನಲ್ಲಿ ಅಕ್ಕಿ ಕೊಳೆಯುತ್ತಿದೆ. ರಾಜ್ಯದ ಎಫ್.ಸಿ.ಐನಲ್ಲಿ 7 ಲಕ್ಷ ಟನ್ ಅಕ್ಕಿ ದಾಸ್ತಾನಿದೆ. ಇದನ್ನು ಖಾಸಗಿಯವರಿಗೆ ಮಾರುತ್ತಿದ್ದು ರಾಜಕೀಯ ಕಾರಣಕ್ಕೋಸ್ಕರ ಅಕ್ಕಿ ಕೊಡುತ್ತಿಲ್ಲ ಎಂದು ಆರೋಪಿಸಿದರು.
ಜಿಲ್ಲೆಯ ಕೊರಟಗೆರೆಯಲ್ಲಿ ಬಕ್ರಿದ್ ಹಬ್ಬದಲ್ಲಿ ಪಾಲ್ಗೊಂಡ ಬಳಿಕ ಮಾತನಾಡಿದ ಅವರು, ಸದ್ಯಕ್ಕೆ 5 ಕೆ.ಜಿ. ಅಕ್ಕಿ ಬದಲಿಗೆ ದುಡ್ಡು ಕೊಡುತ್ತಿದ್ದೇವೆ. ಕೇವಲ ಮೂರು ತಿಂಗಳ ಕಾಲ ಮಾತ್ರ ದುಡ್ಡು ಕೊಡುತ್ತೇವೆ. ಅಷ್ಟರಲ್ಲಿ ಅಕ್ಕಿ ಹೊಂದಿಸುತ್ತೇವೆ. 10 ಕೆ.ಜಿ. ಅಕ್ಕಿಗೆ ದುಡ್ಡು ಹಾಕಬೇಕು ಎಂಬ ಬಿಜೆಪಿಯವರ ವಾದ ಸರಿಯಿಲ್ಲ. ಬಿಜೆಪಿಯವರಿಗೆ ಇದರ ಕುರಿತು ಮಾತನಾಡುವ ನೈತಿಕತೆ ಇಲ್ಲ. ನಾವು ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿದ್ದೇವೆ ತಿಳಿಸಿದರು.
ಅಕ್ಕಿ ಬದಲು ದುಡ್ಡು ಕೊಡಿ ಎಂದು ಬಿಜೆಪಿಯವರು ಸಲಹೆ ನೀಡಿದಕ್ಕೆ ದುಡ್ಡು ತಿನ್ನೋಕಾಗುತ್ತಾ ಎಂದ ಸಿದ್ದರಾಮಯ್ಯ ಅವರು ಹೇಳಿದ್ದ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಇದು ಪ್ರೆಸ್ಟೀಜ್ ವಿಚಾರ ಆಗಬಾರದು. ಬಡವರ ಹಸಿವಿನ ಪ್ರಶ್ನೆಯಾಗಬೇಕು. ಪ್ರೆಸ್ಟೀಜ್ ನಿಂದ ಹೊಟ್ಟೆ ತುಂಬಲ್ಲ. ಬಿಜೆಪಿಯವರೇ ಹಣ ಕೊಡಿ ಎಂದು ಬೊಬ್ಬೆಯೊಡೆದರು. ಈಗ ಏಕಾಏಕಿ ಟೀಕೆ ಮಾಡುತ್ತಿದ್ದಾರೆ. ಬಡವರ ಹಸಿವಿನ ವಿಚಾರದಲ್ಲಿ ರಾಜಕೀಯ ಮಾಡಬಾರದು ಎಂದು ಕಿವಿಮಾತು ಹೇಳಿದರು.
ಎಲ್ಲೋ ಒಂದು ಕಡೆ ಮುಸ್ಲಿಂರಿಗೆ ಹಿಂದಿನ ಸರ್ಕಾರದಿಂದ ಆತಂಕ ಇತ್ತು, ಭಯದ ವಾತಾವರಣ ಇತ್ತು. ಅದೆಲ್ಲವನ್ನೂ ಬಿಟ್ಟು ಕಾಂಗ್ರೆಸ್ ಗೆ ಮತ ಹಾಕಿದ್ದಾರೆ. ಕಾಂಗ್ರೆಸ್ ಜಾತ್ಯತೀತವಾದ ಪಕ್ಷ. ಹಾಗಾಗಿ ಅವರು ನಮ್ಮ ಜತೆ ನಿಂತಿದ್ದಾರೆ ಎಂದರು.