ತುಮಕೂರು: ಬಿಜೆಪಿಯ ತತ್ವ ಸಿದ್ದಾಂತವನ್ನು ಒಪ್ಪಿ ಜೆಡಿಎಸ್ ಮುಖಂಡರಾದ ೨ನೇ ವಾರ್ಡಿನ ಕುರುಬ ಸಮುದಾಯದ ಮುಖಂಡ ಇಂದ್ರಕುಮಾರ್ ಹಾಗು ಅವರ ಅನುಯಾಯಿಗಳು ಬಿಜೆಪಿ ಸೇರ್ಪಡೆಯಾದರು.
ನಗರದ ಬಿಜೆಪಿ ಪ್ರಚಾರ ಕಾರ್ಯಾಲಯದಲ್ಲಿ ಇಂದ್ರಕುಮಾರ್, ನರಸಿಂಹಮೂರ್ತಿ, ಭಾಸ್ಕರ್, ಚಿಕ್ಕಣ ಸೇರಿದಂತೆ ಹತ್ತಕ್ಕೂ ಹೆಚ್ಚು ಬೆಂಬಲಿಗರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ರವಿಶಂಕರ್ ಹೆಬ್ಬಾಕ, ಶಾಸಕ ಹಾಗು ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಿ.ಬಿ.ಜೋತಿಗಣೇಶ್ ,ಟೂಡಾ ಮಾಜಿ ಅಧ್ಯಕ್ಷ ಬಿ.ಎಸ್.ನಾಗೇಶ್ ಅವರುಗಳ ಸಮ್ಮುಖದಲ್ಲಿ ಬಿಜೆಪಿ ಬಾವುಟ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು.
ಈ ವೇಳೆ ಮಾತನಾಡಿದ ಜಿಲ್ಲಾಧ್ಯಕ್ಷ ರವಿ ಹೆಬ್ಬಾಕ, ಚುನಾವಣೆ ಘೋಷಣೆ ಯಾದ ದಿನದಂದಲೂ ವಿವಿಧ ಪಕ್ಷಗಳ ಮುಖಂಡರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕಾರ್ಯವೈಖರಿಯನ್ನು ಮೆಚ್ಚಿ ಬಿಜೆಪಿಗೆ ಸೇರ್ಪಡೆ ಯಾಗುತ್ತಿದ್ದಾರೆ.ಅದು ಇಂದು ಸಹ ಮುಂದುವರೆದಿದೆ. ೨ನೇ ವಾರ್ಡಿನ ಜೆಡಿಎಸ್ ಮುಖಂಡರು ತಮ್ಮ ಅಪಾರ ಬೆಂಬಲಿಗರೊಂದಿಗೆ ಇಂದು ಪಕ್ಷಕ್ಕೆ ಸೇರ್ಪಡೆಯಾದರು, ಅವರೆಲ್ಲರೂ ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಲಿದ್ದಾರೆ. ಇದರಿಂದ ನಮ್ಮ ಪಕ್ಷದ ಅಭ್ಯರ್ಥಿಯಾಗಿರುವ ಬಿ.ಬಿ.ಜೋತಿಗಣೇಶ್ ನಿಚ್ಚಳವಾಗಿ ಗೆಲುವು ಸಾಧಿಸಲಿದ್ದಾರೆ ಎಂಬ ಆಶಾಭಾವನೆ ವ್ಯಕ್ತಪಡಿಸಿದರು.
ತುಮಕೂರು ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಿ.ಬಿ.ಜೋತಿಗಣೇಶ್ ಮಾತನಾಡಿ, ದೇಶದ ಭದ್ರತೆಯ ದೃಷ್ಟಿಯಿಂದ ಇಂದು ಎಲ್ಲಾ ವರ್ಗದ ಜನರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ. ಮುಂದಿನ ೨೦ ದಿನಗಳ ಕಾಲ ಬಿಜೆಪಿ ಕಾರ್ಯಕರ್ತರು ಬಹಳ ಕ್ರಿಯಾಶೀಲರಾಗಿ ಕೆಲಸ ಮಾಡುವ ಮೂಲಕ ಪಕ್ಚವನ್ನು ಗೆಲ್ಲಲು ದುಡಿಯಬೇಕು. ಈ ಬಾರಿ ಬಿಜೆಪಿ ೫೮ ಜನ ಹೊಸಬರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿದೆ. ಮುಂದಿನ ದಿನಗಳಲ್ಲಿ ನಿಮಗೂ ಅವಕಾಶ ದೊರೆಯುವುದು ನಿಶ್ಚಿತ. ಹಾಗಾಗಿ ಹೊಸದಾಗಿ ಪಕ್ಷಕ್ಕೆ ಸೇರ್ಪಡೆಯಾದವರೊಂದಿಗೆ ಪಕ್ಷದಲ್ಲಿ ಈಗಾಗಲೇ ಗುರುತಿಸಿಕೊಂಡವರು ಅವರೊಂದಿಗೆ ಸಮನ್ವಯ ಸಾಧಿಸಿ, ಬಿಜೆಪಿ ವಿಜಯಿ ಆಗುವಂತೆ ಮಾಡಬೇಕೆಂದರು.
ಈ ವೇಳೆ ಪಕ್ಷದ ನಗರ ಮಂಡಲ ಅಧ್ಯಕ್ಷ ಹನುಮಂತರಾಜು, ಮುಖಂಡರಾದ ರಾಜೀವ್, ಗಣೇಶ್, ವಿರೂಪಾಕ್ಷಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.