ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕನಸಿನ ಯೋಜನೆ ಅನ್ನಭಾಗ್ಯ ಜಾರಿಗಾಗಿ ಅಕ್ಕಿ ಹೊಂದಿಸಲು ಸರ್ಕಾರ ಕಸರತ್ತು ನಡೆಸಿದೆ. ಈ ಹಿನ್ನೆಲೆಯಲ್ಲಿ ಸಚಿವ ಕೆಎಚ್ ಮುನಿಯಪ್ಪ ಇಂದು (ಜೂನ್ 23) ನವದೆಹಲಿಯಲ್ಲಿ ಕೇಂದ್ರ ಆಹಾರ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿದರು. ಈ ವೇಳೆ ಕರ್ನಾಟಕಕ್ಕೆ ಅಕ್ಕಿ ಪೂರೈಸುವಂತೆ ಮನವಿ ಮಾಡಿದರು.
ಆದರೆ ಪಿಯೂಷ್ ಗೋಯಲ್ ಅವರು ಹಾರಿಕೆಯ ಉತ್ತರ ನೀಡಿದ್ದಾರೆ ಎಂದು ಮುನಿಯಪ್ಪ ಹೇಳಿದ್ದಾರೆ. ಪಿಯೂಷ್ ಗೋಯಲ್ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಮುನಿಯಪ್ಪ, ಅಕ್ಕಿ ಕೊಡಲು ಆಗುವುದಿಲ್ಲ ಎಂದು ಗೋಯಲ್ ಹೇಳಿದ್ದಾರೆ. ಹೆಚ್ಚುವರಿ ಅಕ್ಕಿ ಪೂರೈಸಲು ಆಗಲ್ಲ ಎಂದಿದ್ದಾರೆ. ಹಣ ನೀಡುತ್ತೇವೆ ಅಕ್ಕಿ ಪೂರೈಸಿ ಎಂದು ಕೇಳಿದೆ. ಆದ್ರೆ ಕೇಂದ್ರ ಸಚಿವ ಗೋಯಲ್ ಹಾರಿಕೆ ಉತ್ತರ ಕೊಟ್ಟಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿಸದರು.
ರಾಷ್ಟಪತಿ ಭೇಟಿ, ಕೇಂದ್ರ ಸಚಿವರ ಭೇಟಿ ಸೇರಿದಂತೆ ವಿವಿಧ ಕಾರಣಕ್ಕೆ ದೆಹಲಿಗೆ ಹಾರಿದ್ದ ಸಿಎಂ ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನ ಭೇಟಿಯಾಗಿ ಅಕ್ಕಿ ಸಂಬಂಧ ಚರ್ಚಿಸಿದ್ದರು. ಅಮಿತ್ ಶಾ ಕೂಡಾ ಸಂಬಂಧ ಪಟ್ಟವರ ಜತೆ ಚರ್ಚಿಸುತ್ತೇನೆ ಎಂದು ಹೇಳಿದ್ದರು ಆದ್ರೆ, ಇದೀಗ ಸ್ವತಃ ಕೇಂದ್ರ ಆಹಾರ ಸಚಿವ ಪಿಯೂಷ್ ಗೋಯಲ್, ಕರ್ನಾಟಕಕ್ಕೆ ಅಕ್ಕಿ ಕೊಡಲು ನಿರಾಕರಣೆ ಮಾಡಿದ್ದಾರೆ ಎಂದು ಮುನಿಯಪ್ಪ ತಿಳಿಸಿದ್ದಾರೆ.