ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಗಮದ ಹಣ ಅಕ್ರಮವಾಗಿ ವರ್ಗಾವಣೆಯಾದ ಅಕೌಂಟ್​ಗಳನ್ನು ಫ್ರೀಜ್ ಮಾಡುವಂತೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಮುಖ್ಯ ಕಾರ್ಯದರ್ಶಿ ಎನ್ ಮಂಜುನಾಥ್ ಪ್ರಸಾದ್ ಅವರು ಆರ್​ಬಿಎಲ್ ಬ್ಯಾಂಕ್ ಮುಖ್ಯಸ್ಥರಿಗೆ ಪತ್ರ ಬರೆದಿದ್ದಾರೆ.

ತರಬೇತಿ ಸಂಸ್ಥೆಗಳು, ಮಾನವ ಸಂಪನ್ಮೂಲ ನಿರ್ವಹಣೆ, ಭದ್ರತಾ ಏಜೆನ್ಸಿ, ವಾಣಿಜ್ಯ ವಹಿವಾಟು ಸಂಸ್ಥೆ, ಸಾಫ್ಟ್‌ವೇರ್‌ ಕಂಪನಿಗಳ ಹೆಸರಿನಲ್ಲಿರುವ ಖಾತೆಗಳಿಗೆ ‌ಮಾರ್ಚ್‌ 3ರಿಂದ ಮಾರ್ಚ್‌ 30ರ ಅವಧಿಯಲ್ಲಿ 49.52 ಕೋಟಿ ಮತ್ತು ವ್ಯಕ್ತಿಗಳ ಹೆಸರಿನಲ್ಲಿರುವ ಎಂಟು ಖಾತೆಗಳಿಗೆ ಮಾರ್ಚ್‌ 30ರಂದು ಒಂದೇ ಚೆಕ್‌ ಬಳಸಿ 40.10 ಕೋಟಿ ರೂ. ವರ್ಗಾವಣೆಯಾಗಿದೆ.

ಏನಿದು ಪ್ರಕರಣ
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಸುಮಾರು 80 ರಿಂದ 85 ಕೋಟಿ ಅನುದಾನ ದುರ್ಬಳಕೆಯಾಗಿದೆ. ಈ ಅವ್ಯವಹಾರದಿಂದ ಮನನೊಂದು ನಿಗಮದ ಅಧೀಕ್ಷಕ ಪ್ರಾಮಾಣಿಕ ಅಧಿಕಾರಿ ಚಂದ್ರಶೇಖರ್ ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಡೆತ್​ನೋಟ್​ ನಲ್ಲಿ ಸಚಿವರ ಮೌಖಿಕ ಆದೇಶದಂತೆ ಅವ್ಯಹಾರ ನಡೆದಿದೆ ಎಂದು ಚಂದ್ರಶೇಖರ ನಮೂದಿಸಿದ್ದರು. ಪ್ರಕರಣದ ತನಿಖೆಯನ್ನು ಸಿಬಿಐ ನಡೆಸುತ್ತಿದೆ. ಇತ್ತ ಯುನಿಯನ್ ಬ್ಯಾಂಕ್ ಆಫ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕರು ಸಿಬಿಐ ಪ್ರಾದೇಶಿಕ ಕಚೇರಿಗೆ ದೂರು ನೀಡಿದ್ದಾರೆ.