ಬೆಂಗಳೂರು: ರಾಜ್ಯದಲ್ಲಿ ದಲಿತರು ಮುಖ್ಯಮಂತ್ರಿ ಸ್ಥಾನದ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಪ್ರಮುಖ ದಲಿತ ಮುಖಂಡ, ಸಚಿವ ಡಾ.ಜಿ.ಪರಮೇಶ್ವರ ಅವರ ಹೇಳಿಕೆ ದಲಿತ ಸಿಎಂ ಚರ್ಚೆಗೆ ಎಡೆಮಾಡಿಕೊಟ್ಟಿದ್ದಲ್ಲದೆ, ಕಾಂಗ್ರೆಸ್ ಸರ್ಕಾರದೊಳಗೆ ಎಲ್ಲವೂ ಸರಿಯಿಲ್ಲ ಎಂಬುದನ್ನು ಬಹಿರಂಗಪಡಿಸಿದೆ.
ನಾನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷನಾಗಿದ್ದಾಗ 2013 ರಲ್ಲಿ ಪಕ್ಷವನ್ನು ಅಧಿಕಾರಕ್ಕೆ ತಂದರೂ ಸಿಎಂ ಆಗಲು ಸಾಧ್ಯವಾಗಲಿಲ್ಲ, ನನ್ನ ನಾಯಕತ್ವದಲ್ಲಿ ಪಕ್ಷವು ಯಶಸ್ಸು ಸಾಧಿಸಿದ್ದರೂ ಯಾರೂ ನನಗೆ ಕ್ರೆಡಿಟ್ ನೀಡಲಿಲ್ಲ. 2018ರಲ್ಲಿ ದಲಿತರನ್ನು ಕಡೆಗಣಿಸಿದ್ದರಿಂದ ಪಕ್ಷ ಸೋಲಿನ ರುಚಿ ಅನುಭವಿಸಬೇಕಾಯಿತು ಎಂದು ಪರಮೇಶ್ವರ್ ಹೇಳಿದ್ದಾರೆ.
ಇಲ್ಲಿನ ಅಂಬೇಡ್ಕರ್ ಭವನದಲ್ಲಿ ಮಂಗಳವಾರ ವಿವಿಧ ದಲಿತ ಸಂಘಟನೆಗಳು ಹಮ್ಮಿಕೊಂಡಿದ್ದ ಪರಿಶಿಷ್ಟ ಜಾತಿಗಳ ಸಮಾವೇಶವನ್ನುದ್ದೇಶಿಸಿ ಅವರು ಮಾತನಾಡಿದರು.
ಉದ್ದೇಶಪೂರ್ವಕವಾಗಿ ದಲಿತ ನಾಯಕರಿಗೆ ಪಕ್ಷದಲ್ಲಿ ಸಿಎಂ ಸ್ಥಾನ ನಿರಾಕರಿಸಲಾಗುತ್ತಿದೆ ಎಂದು ಸಚಿವರು ಕಿಡಿಕಾರಿದರು. ‘‘ನಾನು ಅಥವಾ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಏಕೆ ಮುಖ್ಯಮಂತ್ರಿಯಾಗಬಾರದು ಎಂದು ಪರಮೇಶ್ವರ ತಿಳಿಸಿದ್ದಾರೆ. ದಲಿತ ನಾಯಕರೆಲ್ಲ ಈ ನಿಟ್ಟಿನಲ್ಲಿ ಒಗ್ಗಟ್ಟಾಗಬೇಕು ಎಂದು ಎಂದು ಸಮುದಾಯದ ಮುಖಂಡರಿಗೆ ಕರೆ ನೀಡಿದರು.
ವಿಧಾನಸಭೆ ಚುನಾವಣೆಯಲ್ಲಿ ದಲಿತರು ಮತ್ತು ಹಿಂದುಳಿದ ಸಮುದಾಯದ ಮತಗಳು ಕಾಂಗ್ರೆಸ್ಗೆ ವರವಾಗಿತ್ತು. ಈ ನಿಟ್ಟಿನಲ್ಲಿ ಪರಮೇಶ್ವರ ಹೇಳಿಕೆ ಮಹತ್ವ ಪಡೆದಿದೆ. ಅಲ್ಲದೆ ಲೋಕಸಭೆ ಚುನಾವಣೆ, ಮತ್ತು ಬಿಬಿಎಂಪಿ ಚುನಾವಣೆಯಲ್ಲಿ ಹಿಂದುಳಿದ ಮತ ಬ್ಯಾಂಕ್ ಮೇಲೆ ಸಚಿವರ ಹೇಳಿಕೆ ಪ್ರಭಾವ ಬೀರುವ ಸಾಧ್ಯತೆ ಇರುವುದರಿಂದ ಪಕ್ಷದ ನಾಯಕತ್ವ ಸಚಿವರ ಹೇಳಿಕೆ ಮೇಲೆ ಹದ್ದಿನ ಕಣ್ಣಿಟ್ಟಿದೆ.