ಬೆಂಗಳೂರು: ಲೋಕಸಭಾ ಚುನಾವಣೆ ಗೆಲ್ಲಲು ಕಾಂಗ್ರೆಸ್ ಈಗಾಗಲೇ ತಯಾರಿ ನಡೆಸುತ್ತಿದ್ದು, ಸೆಲೆಬ್ರಿಟಿ ಅಭ್ಯರ್ಥಿಗಳಿಗೆ ಮಣೆ ಹಾಕಲು ಕಾಂಗ್ರೆಸ್ ಮುಂದಾಗಿದೆ.
ಬೆಂಗಳೂರಿನಲ್ಲಿ ಭಾನುವಾರ ನಡೆದ ಈಡಿಗ ಸಮುದಾಯದ ಸಮಾವೇಶದಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಅವರು ಶಿವಣ್ಣಗೆ ಬಹಿರಂಗವಾಗಿ ಲೋಕಸಭಾ ಚುನಾವಣೆಯ ಆಫರ್ ನೀಡಿದ್ದಾರೆ.
ಬೆಂಗಳೂರಿನಲ್ಲಿ 2 ಕ್ಷೇತ್ರ, ಮಂಡ್ಯ ಹಾಗೂ ಶಿವಮೊಗ್ಗದಲ್ಲಿ ಸೆಲೆಬ್ರೆಟಿಗಳನ್ನು ಅಖಾಡಕ್ಕೆ ಇಳಿಸುವ ಬಗ್ಗೆಯು ಕಾಂಗ್ರೆಸ್ನಲ್ಲಿ ಚರ್ಚೆ ನಡೆದಿದೆ ಎನ್ನಲಾಗಿದೆ. ಅಧಿಕೃತವಾಗಿ ಯಾವುದೇ ಅಭ್ಯರ್ಥಿ ಘೋಷಣೆ ಆಗದೇ ಇದ್ದರೂ ಸೆಲೆಬ್ರೆಟಿ ಲೆಕ್ಕಾಚಾರ ಈ ಬಾರಿ ಕಾಂಗ್ರೆಸ್ನಲ್ಲಿ ಜೋರಾಗಿದೆ ಎನ್ನಲಾಗಿದೆ.
ಅಂದು ನಂದನ್ ನೀಲೆಕಣಿ, ಮೋಹಕ ತಾರೆ ರಮ್ಯಾ ಹೀಗೆ ಸಾಕಷ್ಟು ಸೆಲಬ್ರೆಟಿಗಳನ್ನು ಸ್ಪರ್ಧೆಗಿಳಿಸಲಾಗಿತ್ತು. 2013ರ ಮಂಡ್ಯ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ರಮ್ಯಾ ಗೆದ್ದು ಲೋಕಸಭಾ ಪ್ರವೇಶಿಸಿದ್ದರೂ 2014ರ ಚುನಾವಣೆಯಲ್ಲಿ ಸಿಎಸ್ ಪುಟ್ಟರಾಜು ವಿರುದ್ಧ ಸೋತಿದ್ದರು. ನಂತರ ರಮ್ಯಾ ಯಾವುದೇ ಚುನಾವಣೆಗೆ ಅಭ್ಯರ್ಥಿಯಾಗಿ ನಿಂತಿರಲಿಲ್ಲ.